ಕುಲಭೂಷಣ್ ಜಾಧವ್ ಮರಣದಂಡನೆಗೆ ಅಂತಾರಾಷ್ಟ್ರೀಯ ನ್ಯಾಯಾಲಯದ ತಡೆ
ಹೊಸದಿಲ್ಲಿ, ಮೇ10: ಭಾರತದ ನಿವೃತ್ತ ಸೇನಾಧಿಕಾರಿ ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನ ವಿಧಿಸಿದ್ದ ಮರಣದಂಡನೆ ಶಿಕ್ಷೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ ಮಂಗಳವಾರ ತಡೆಯಾಜ್ಞೆ ವಿಧಿಸಿದೆ.
ಅಂತಾರಾಷ್ಟ್ರೀಯ ನ್ಯಾಯಾಲಯದಿಂದ ಮುಂದಿನ ಸೂಚನೆ ಬರುವವರೆಗೆ ಜಾಧವ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ನ್ಯಾಯಾಲಯ ಸೂಚಿಸಿದೆ.ಇದರಿಂದ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ.
ಕುಲಭೂಷಣ್ ಜಾಧವ್ ಮೇಲೆ ಪಾಕಿಸ್ತಾನ ಬೇಹುಗಾರಿಕೆ ಆರೋಪ ಹೊರಿಸಿ ಮಿಲಿಟರಿ ನ್ಯಾಯಾಲಯದಲ್ಲಿ ಮರಣದಂಡನೆ ವಿಧಿಸಿತ್ತು. ಇದರ ವಿರುದ್ಧ ಭಾರತ ಹಾಲೆಂಡ್ ನ ಹೇಗ್ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಜಾಧವ್ ಗಲ್ಲು ಶಿಕ್ಷೆ ತಡೆಹಿಡಿಯುವಂತೆ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ಗೆ ನ್ಯಾಯಾಲಯ ಸೂಚಿಸಿದೆ.
ಬೇಹುಗಾರಿಕೆ ಆರೋಪದ ಮೇಲೆ ಕುಲಭೂಷಣ್ ಅವರನ್ನು ಕಳೆದ ವರ್ಷ ಮಾರ್ಚ್ 6ರಂದು ಇರಾನ್ನಲ್ಲಿ ಬಂಧಿಸಲಾಗಿತ್ತು. ಬಳಿಕ ವಿಚಾರಣೆ ನಡೆಸಿದ ಮಿಲಿಟರಿ ನ್ಯಾಯಾಲಯ ಮರಣದಂಡನೆ ವಿಧಿಸಿತ್ತು. ಜಾಧವ್ರ ತಾಯಿ ಅವಂತಿ ಜಾಧವ್ ಮರಣದಂಡನೆ ತಡೆ ಕೋರಿ ಕಳೆದ ತಿಂಗಳು ಪಾಕ್ನ ಉನ್ನತ ಕೋರ್ಟ್ಗೆ ಮನವಿ ಸಲ್ಲಿಸಿದ್ದರು.