ಡಿ.31ಕ್ಕೆ ಸಿಎಂ ಅಧ್ಯಕ್ಷತೆಯಲ್ಲಿ ಸಮುದಾಯದ ಮುಖಂಡರ ಸಭೆ: ಸಚಿವ ಆಂಜನೇಯ
ನ್ಯಾ.ಸದಾಶಿವ ಆಯೋಗದ ವರದಿ ಅನುಷ್ಠಾನ
ಬೆಂಗಳೂರು, ಡಿ. 20: ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಸಂಬಂಧದ ನ್ಯಾ. ಸದಾಶಿವ ಆಯೋಗದ ವರದಿ ಅನುಷ್ಠಾನಗೊಳಿಸುವ ಬಗ್ಗೆ ಡಿ.31ಕ್ಕೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಅಧ್ಯಕ್ಷತೆಯಲ್ಲಿ ಸಮುದಾಯದ ಮುಖಂಡರ ಸಭೆ ಕರೆಯಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ, ಸಚಿವರಾದ ರುದ್ರಪ್ಪ ಲಮಾಣಿ, ಆರ್.ಬಿ.ತಿಮ್ಮಾಪುರ, ಮಾಜಿ ಸಚಿವ ಶಿವರಾಜ ತಂಗಡಗಿ ಸೇರಿದಂತೆ ಸಮುದಾಯದ ಶಾಸಕರು ಹಾಗೂ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.
ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಸಂಬಂಧದ ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕ್ಕೆ ಆಗ್ರಹಿಸಿ ಒಂದು ಸಮುದಾಯ ಬಹುದಿನಗಳಿಂದ ಹೋರಾಟ ಮಾಡುತ್ತಿದ್ದು, ಈ ಬಗ್ಗೆ ಸಿಎಂ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆಂಜನೇಯ ತಿಳಿಸಿದರು.
ರಾಷ್ಟ್ರಪತಿಗಳ ಭೇಟಿ: ಎಸ್ಸಿ-ಎಸ್ಟಿ ನೌಕರರ ಭಡ್ತಿ ಮೀಸಲಾತಿ ಮುಂದುವರಿಕೆ ಸಂಬಂಧದ ‘ಜೇಷ್ಠತಾ’ ಮಸೂದೆಗೆ ಅಂಕಿತ ಹಾಕುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಶೀಘ್ರದಲ್ಲೆ ಭೇಟಿ ಮಾಡಿ ಮನವಿ ಮಾಡಲಾಗುವುದು ಎಂದರು.