ಕೊಲೆ ಪ್ರಕರಣ: ಮೂವರ ಬಂಧನ
ಬೆಂಗಳೂರು, ಫೆ.6: ಕ್ಷುಲ್ಲಕ ವಿಚಾರಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನೊಬ್ಬನನ್ನು ಕೊಲೆಗೈದ ಪ್ರಕರಣ ಸಂಬಂಧ ಮೂವರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ಪ್ರದೀಪ್(25), ಶಿವರಾಜು(24) ಮತ್ತು ಸತೀಶ್(29) ಬಂಧಿತ ಕೊಲೆ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಫೆ.2ರಂದು ಜ್ಞಾನಭಾರತಿ ಠಾಣೆ ವ್ಯಾಪ್ತಿಯ ಮುದ್ದಿನಪಾಳ್ಯ ಮುಖ್ಯರಸ್ತೆಯಲ್ಲಿರುವ ಮಾರುತಿ ಬಾರ್ ಅಂಡ್ ರೆಸ್ಟೋರೆಂಟ್ನ ಮುಂಭಾಗ ಕ್ಷುಲ್ಲಕ ಕಾರಣಕ್ಕಾಗಿ ಮಲ್ಲತ್ತಹಳ್ಳಿಯ ಜ್ಞಾನಜ್ಯೋತಿ ನಗರ ನಿವಾಸಿ ಅರುಣ್ ಕೃಷ್ಣ ಎಂಬಾತನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಲ್ಲದೆ, ಈತನ ಜತೆಯಲ್ಲಿದ್ದ ದಿಲ್ಲನ್ ಸೋಮಯ್ಯ ಮೇಲೂ ಗಂಭೀರ ಹಲ್ಲೆ ನಡೆಸಿ ಪರಾರಿಯಾಗಿದ್ದರು ಎಂದು ತಿಳಿದುಬಂದಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಜ್ಞಾನಭಾರತಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳು ಅಪರಾಧ ಹಿನ್ನೆಲೆಯುಳ್ಳವರಾಗಿದ್ದು, ಇವರ ವಿರುದ್ಧ ಕುಮಾರಸ್ವಾಮಿ ಬಡಾವಣೆ ಮತ್ತು ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಗಳಲ್ಲಿ ಕೊಲೆ ಪ್ರಯತ್ನ, ಡಕಾಯಿತಿ, ದರೋಡೆಗೆ ಸಂಚು, ಹಲ್ಲೆಯಂತಹ ಪ್ರಕರಣಗಳು ದಾಖಲಾಗಿದ್ದು, ಈ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುತ್ತವೆ ಎನ್ನಲಾಗಿದೆ.