ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆಯಿಂದ ಮಕ್ಕಳು ಅನಾಥ: ಸುರೇಶ್ ಕುಮಾರ್
ಬೆಂಗಳೂರು, ಮಾ. 5: ನೈಸ್ ಸಂಸ್ಥೆ ಮುಖ್ಯಸ್ಥ ಹಾಗೂ ಕರ್ನಾಟಕ ಮಕ್ಕಳ ಪಕ್ಷದ ಶಾಸಕ ಅಶೋಕ್ ಖೇಣಿ, ಮಕ್ಕಳನ್ನು ಬಿಟ್ಟು ಕಾಂಗ್ರೆಸ್ ಸೇರ್ಪಡೆಯಿಂದ ಮಕ್ಕಳು ಅನಾಥರಾಗಿದ್ದಾರೆ ಎಂದು ಬಿಜೆಪಿ ವಕ್ತಾರ ಎಸ್.ಸುರೇಶ್ ಕುಮಾರ್ ಲೇವಡಿ ಮಾಡಿದ್ದಾರೆ.
ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಇದೀಗ ಅಧಿಕಾರದ ಹಸಿವು ಹೆಚ್ಚಾಗಿದೆ. ಹೀಗಾಗಿ ಖೇಣಿಯಂತಹ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ. ಇದನ್ನು ಬಿಜೆಪಿ ಅಸ್ತ್ರವನ್ನಾಗಿ ಬಳಸಿಕೊಳ್ಳಲಿದೆ ಎಂದು ತಿಳಿಸಿದರು.
ಈ ಹಿಂದೆ ವಿಪಕ್ಷದಲ್ಲಿದ್ದ ಟೀಕೆಗೆ ಒಳಗಾಗಿ, ಜೈಲಿಗೆ ಹೋಗಿ ಬಂದವರೆಲ್ಲ ಕಾಂಗ್ರೆಸ್ ಸೇರಿದ ಕೂಡಲೇ ಅವರು ಮಹಾಪುರುಷರಾಗುತ್ತಿದ್ದಾರೆಂದು ಟೀಕಿಸಿದ ಅವರು, ನೈಸ್ ಸಂಸ್ಥೆ ವಶಪಡಿಸಿಕೊಂಡಿರುವ ಹೆಚ್ಚುವರಿ ಭೂಮಿ ಹಿಂಪಡೆಯಬೇಕು ಎಂದು ಸದನ ಸಮಿತಿ ಶಿಫಾರಸು ಮಾಡಿದ ಬೆನ್ನಲೆ ಅವರು ಕಾಂಗ್ರೆಸ್ ಸೇರ್ಪಡೆ ಸಂಶಯ ಸೃಷ್ಟಿಸಿದೆ ಎಂದರು.
‘ಬೆಂಗಳೂರು ಉಳಿಸಿ’ ಹೋರಾಟಕ್ಕೆ ಮುಂದಾಗಿರುವ ಬಿಜೆಪಿಗೆ ಖೇಣಿ ಕಾಂಗ್ರೆಸ್ ಸೇರ್ಪಡೆ ಪಕ್ಷಕ್ಕೆ ಹೊಸ ಅಸ್ತ್ರವೊಂದು ಸಿಕ್ಕಿದೆ. ಸ್ವಾತಂತ್ರಕ್ಕಾಗಿ ಹೋರಾಡಿದ ಪಕ್ಷವಾಗಿ ಈಗ ಕಾಂಗ್ರೆಸ್ ಉಳಿದಿಲ್ಲ. ಬದಲಿಗೆ ಅದು ಜನರನ್ನು ಹಿಂಸಿರುವವರಿಗೆ ರಕ್ಷಣೆ ನೀಡುವ ಪಕ್ಷವಾಗಿದೆ ಎಂದು ಟೀಕಿಸಿದರು.