ಅಮಿತ್ ಶಾ ವಿರುದ್ಧ ಪ್ರತಿಭಟನೆ: ಬಂಧನ
ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ
ಬೆಂಗಳೂರು, ಎ.18: ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತಾ ವಿಚಾರದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿ ಜಾಗತಿಕ ಲಿಂಗಾಯತ ಮಹಾಸಭಾದ ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿರುವ ಬಸವವೇಶ್ವರ ಪ್ರತಿಮೆಯ ಮುಂಭಾಗ ಪ್ರತಿಭಟನೆ ನಡೆಸಿದರು.
ಬುಧವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಸವೇಶ್ವರ ಪುತ್ಥಳಿಗೆ ಪುಷ್ಪಹಾರ ಸಲ್ಲಿಸಲು ಆಗಮಿಸುವ ಮುನ್ನ ಸುಮಾರು 40-50 ಮಂದಿ ಜಾಗತಿಕ ಲಿಂಗಾಯತ ಮಹಾಸಭಾದ ಕಾರ್ಯಕರ್ತರು ಪ್ರತಿಮೆಯ ಮುಂಭಾಗ ಪ್ರತಿಭಟನೆ ನಡೆಸಿ, ಲಿಂಗಾಯತ ಧರ್ಮದ ಮಾನ್ಯತೆ ಬಗ್ಗೆ ಅಮಿತ್ಶಾ ತಮ್ಮ ನಿಲುವನ್ನು ಸ್ಪಷ್ಟಪಡಿಸುವವರೆಗೆ ಬಸವಣ್ಣನ ಪ್ರತಿಮೆಗೆ ಹಾರಹಾಕಲು ಬಿಡುವುದಿಲ್ಲವೆಂದು ಪಟ್ಟು ಹಿಡಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಅಮಿತ್ ಶಾ ಗಲಿಬಿಲಿ: ಪ್ರತಿಭಟನೆಯ ನಂತರ ಅಮಿತ್ ಶಾ ಬಸವೇಶ್ವರ ವೃತ್ತಕ್ಕೆ ಬಂದು ಬಸವಣ್ಣನಿಗೆ ಮಾಲಾರ್ಪಣೆ ಮಾಡಿದರು. ಆದರೆ, ಅವರು ಹಾಕಿದ ಹಾರ ಕೆಳಕ್ಕೆ ಬಿತ್ತು. ಇದರಿಂದ ಅಮಿತ್ ಶಾ ಕೆಲವೊತ್ತು ಗಲಿಬಿಲಿಗೊಂಡರು. ನಂತರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಅಲ್ಲಿಂದ ತೆರಳಿದರು. ಈ ವೇಳೆ ಬೇಲಿ ಮಠದ ಶಿವರುದ್ರ ಸ್ವಾಮೀಜಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ್, ಡಿ.ವಿ.ಸದಾನಂದಗೌಡ, ಶೋಭಾ ಕರಂದ್ಲಾಜೆ ಮತ್ತಿತರರು ಉಪಸ್ಥಿತರಿದ್ದರು.