ಪರಿಷತ್ ಸ್ಥಾನಕ್ಕೆ ಲಕ್ಷ್ಮೀನಾರಾಯಣ್ ರಾಜೀನಾಮೆ
ಬೆಂಗಳೂರು, ಎ.21: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಎಂ.ಡಿ. ಲಕ್ಷ್ಮೀನಾರಾಯಣ್ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಶನಿವಾರ ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ನಿವಾಸಕ್ಕೆ ಭೇಟಿ ನೀಡಿ ಪರಿಷತ್ ಸದಸ್ಯ ಲಕ್ಷ್ಮೀನಾರಾಯಣ್ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಸ್ವಯಂ ಪ್ರೇರಣೆಯಿಂದ ರಾಜೀನಾಮೆ ಸಲ್ಲಿಕೆ ಮಾಡುತ್ತಿದ್ದೇನೆ. ರಾಜೀನಾಮೆ ಸಲ್ಲಿಕೆಗೆ ಯಾರ ಒತ್ತಡವೂ ಇಲ್ಲ ಎಂದು ಲಿಖಿತವಾಗಿ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.
ಬಿ.ಎಸ್.ಯಡಿಯೂರಪ್ಪಮುಖ್ಯಮಂತ್ರಿ ಆಗಿದ್ದ ವೇಳೆ ಬಿಜೆಪಿ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಲಕ್ಷ್ಮೀನಾರಾಯಣ್, ನಂತರ ಯಡಿಯೂರಪ್ಪ ಬಿಜೆಪಿ ತೊರೆದು ಕೆಜೆಪಿ ಕಟ್ಟಿದಾಗ ಅವರೊಂದಿಗೆ ಹೆಜ್ಜೆ ಹಾಕಿದ್ದರು. ಆದರೆ, ಬದಲಾದ ರಾಜಕೀಯ ವಿದ್ಯಮಾನಗಳಲ್ಲಿ ಯಡಿಯೂರಪ್ಪ ಮರಳಿ ಬಿಜೆಪಿಗೆ ಬಂದರೂ ಲಕ್ಷ್ಮೀನಾರಾಯಣ್ ಬಿಜೆಪಿ ಕಡೆ ಮುಖ ಮಾಡದೆ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡರು. ಈಗ ಕಾಂಗ್ರೆಸ್ನಿಂದ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಪಡೆದುಕೊಂಡಿದ್ದಾರೆ.