ಅಪಾರ್ಟ್ ಮೆಂಟ್ ನಲ್ಲಿ ಪತ್ತೆಯಾದ ಎಲ್ಲಾ ವೋಟರ್ ಐಡಿಗಳು ಅಸಲಿ
ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್
ಬೆಂಗಳೂರು, ಮೇ 9: ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಮತದಾನದ ಗುರುತಿನ ಚೀಟಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ಮುಂದೂಡಬೇಕೆ, ಬೇಡವೆ ಎಂಬುದರ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಪರಿಶೀಲಿಸಿ ಶೀಘ್ರವೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ರಾಜ್ಯ ಮುಖ್ಯಚುನಾವಣಾಧಿಕಾರಿ ಸಂಜೀವ್ಕುಮಾರ್ ತಿಳಿಸಿದರು.
ಬುಧವಾರ ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜರಾಜೇಶ್ವರಿ ಕ್ಷೇತ್ರ ವ್ಯಾಪ್ತಿಯ ಜಾಲಹಳ್ಳಿ ಅಪಾರ್ಟ್ಮೆಂಟ್ವೊಂದರಲ್ಲಿ ಮತದಾನದ ಗುರುತಿನ ಚೀಟಿ ಪತ್ತೆಯಾಗಿವೆ. ಈ ಸಂಬಂಧ ಪ್ರಾಥಮಿಕ ತನಿಖೆಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಕಳಿಸಲಾಗಿದೆ. ಶೀಘ್ರವೆ ಕೇಂದ್ರ ಚುನಾವಣಾ ಆಯೋಗದ ಉಪ ಆಯುಕ್ತರು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಗಂಭೀರ ಪ್ರಕರಣ: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಪಾರ್ಟ್ಮೆಂಟ್ವೊದರಲ್ಲಿ ಆರೋಪಿಗಳು ಸುಮಾರು 9,876 ಮತದಾರರ ಗುರುತಿನ ಚೀಟಿಯನ್ನು ಸಂಗ್ರಹಿಸಲಾಗಿದೆ. ಇಷ್ಟು ದೊಡ್ಡ ಮಟ್ಟದ ಗುರುತಿನ ಚೀಟಿ ಪತ್ತೆಯಾಗಿರುವುದನ್ನು ಗಂಭೀರ ಪ್ರಕರಣವೆಂದು ಪರಿಗಣಿಸಿ ಪೊಲೀಸ್ ಹಾಗೂ ಚುನಾವಣಾ ಆಯೋಗ ತನಿಖೆ ನಡೆಸುತ್ತಿದೆ ಎಂದು ಅವರು ಹೇಳಿದರು.
ಇಬ್ಬರ ಬಂಧನ: ಗುರುತಿನ ಚೀಟಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇವರು ಯಾವ ಪಕ್ಷಕ್ಕೆ ಸೇರಿದವರು ಎಂದು ಈಗಲೆ ಹೇಳಲು ಸಾಧ್ಯವಾಗುವುದಿಲ್ಲ. ತನಿಖೆ ಪೂರ್ಣಗೊಂಡ ಬಳಿಕವಷ್ಟೆ ಆರೋಪಿಗಳ ಹೆಸರನ್ನು ಬಹಿರಂಗ ಪಡಿಸಲಾಗುವುದು ಎಂದು ಅವರು ಹೇಳಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಲ್ಯಾಪ್ಟಾಪ್, ಒಂದು ಪ್ರಿಂಟರ್, ಮೊಬೈಲ್ಗಳನ್ನು ವಶಪಡಿಸಲಾಗಿದೆ. ಹಾಗೂ ಒಂದು ಪಕ್ಷಕ್ಕೆ ಸಂಬಂಧಿಸಿದಂತೆ ಕೆಲವು ಕರಪತ್ರ ಸೇರಿದಂತೆ ಕೆಲವು ವಸ್ತುಗಳು ಪತ್ತೆಯಾಗಿವೆ. ಆ ಸಾಕ್ಷಗಳನ್ನು ಇಟ್ಟುಕೊಂಡು ಆರೋಪವನ್ನು ಸಾಬೀತು ಪಡಿಸಲು ಸಾಧ್ಯವಿಲ್ಲ. ಕೂಲಂಕಶವಾಗಿ ತನಿಖೆ ನಡೆಸಿದ ನಂತರವಷ್ಟೆ ಆರೋಪಿಗಳ ಕುರಿತು ಮಾಹಿತಿ ನೀಡಲಾಗುವುದು ಎಂದು ಅವರು ಹೇಳಿದರು.
ಗುರುತಿನ ಚೀಟಿ ನಕಲಿಯಲ್ಲ
ರಾಜರಾಜೇಶ್ವರಿ ಕ್ಷೇತ್ರದ ಜಾಲಹಳ್ಳಿ ಅಪಾರ್ಟ್ಮೆಂಟ್ವೊಂದರಲ್ಲಿ ಪತ್ತೆಯಾಗಿರುವ ಮತದಾನದ ಗುರುತಿನ ಚೀಟಿಗಳು ಪ್ರಾಥಮಿಕ ತನಿಖೆಯ ಪ್ರಕಾರ ನಕಲಿಯಲ್ಲವೆಂದು ತಿಳಿದುಬಂದಿದೆ. ನಿರ್ದಿಷ್ಟ ಉದ್ದೇಶಕ್ಕಾಗಿ ಮತದಾರರಿಂದ ಗುರುತಿನ ಚೀಟಿಗಳನ್ನು ವಶಪಡಿಸಲಾಗಿದೆ. ಹೀಗಾಗಿ ಈ ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದು ಶೀಘ್ರವೆ ತಿಳಿದು ಬರಲಿದೆ.
-ಸಂಜೀವ್ಕುಮಾರ್, ರಾಜ್ಯ ಮುಖ್ಯ ಚುನಾವಣಾಧಿಕಾರಿ