ಸಚಿವ ಜಾರ್ಜ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಸುಳ್ಳು ಅಫಿಡವಿಟ್ ಸಲ್ಲಿಕೆ: ಆರೋಪ
ಬೆಂಗಳೂರು, ಮೇ 9: ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಗಂಭೀರ ಪ್ರಕರಣ ದಾಖಲಾಗಿದ್ದರೂ, ಉದ್ದೇಶಪೂರ್ವಕವಾಗಿ ಮುಚ್ಚಿಟ್ಟು, ಚುನಾವಣಾ ಆಯೋಗಕ್ಕೆ ಸುಳ್ಳು ಅಫಿಡವಿಟ್ ಅನ್ನು ಸಲ್ಲಿಸಿದ್ದಾರೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷ ದೂರು ನೀಡಿದೆ.
ಬುಧವಾರ ನಗರದ ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಚುನಾವಣೆ ಆಯೋಗ ಕಚೇರಿಗೆ ಭೇಟಿ ನೀಡಿದ ಆಮ್ ಆದ್ಮಿ ಪಕ್ಷ ರಾಜ್ಯ ಉಸ್ತುವಾರಿ ಶಿವಕುಮಾರ್ ಚೆಂಗಲರಾಯ ಅವರು ಚುನಾವಣಾಧಿಕಾರಿಗೆ ದೂರು ಸಲ್ಲಿಸಿ, ಕಾನೂನು ಕ್ರಮ ಜರುಗಿಸುವಂತೆ ಒತ್ತಾಯ ಮಾಡಿದರು
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವಜ್ಞನಗರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯೂ ಆಗಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಚುನಾವಣೆ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ಅಲ್ಲದೆ, ಅವರ ವಿರುದ್ಧ ಈಗಾಗಲೇ ಸಿಬಿಐ ನ್ಯಾಯಾಲಯದಲ್ಲಿ ಗಂಭೀರ ಪ್ರಕರಣ ದಾಖಲಾಗಿದೆ. ಇದರ ಪ್ರತಿಯನ್ನು ಆಯೋಗಕ್ಕೆ ಸಲ್ಲಿಸಲಾಗಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಲಾಗಿದೆ ಎಂದರು.
ದೂರು ಸ್ವೀಕರಿಸಿದ ಚುನಾವಣಾಧಿಕಾರಿಗಳು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುವುದಾಗಿ ಅವರು ತಿಳಿಸಿದರು.