ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ
ಬೆಂಗಳೂರು, ಮೇ 19: ವಿಧಾನಸೌಧದಲ್ಲಿ ವಿಶ್ವಾಸಮತ ಯಾಚಿಸದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ರಾಜಭವನಕ್ಕೆ ತೆರಳುತ್ತಿದ್ದಂತೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕುಣಿದು ಸಂಭ್ರಮಿಸಿದರು.
ಶನಿವಾರ ಸಂಜೆ 4ಗಂಟೆಯ ನಂತರ ಕೆಪಿಸಿಸಿ ಕಚೇರಿ ಸಂತೋಷದ ಕೂಟವಾಗಿತ್ತು. ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರ ಜೈಕಾರಗಳ ಘೋಷಣೆಗಳು ಮುಗಿಲು ಮುಟ್ಟಿದವು. ಕಾರ್ಯಕರ್ತರು ಒಬ್ಬರಿಗೊಬ್ಬರು ಕೈಹಿಡಿದು ಕುಣಿದು ಕಾಂಗ್ರೆಸ್ ಶಾಸಕರಿಗೆ ಶುಭ ಕೋರಿದರು.
ಕೆಲವು ಕಾಂಗ್ರೆಸ್ ಕಾರ್ಯಕರ್ತರು ತೆಂಗಿನ ಕಾಯಿ ಒಡೆಯುವ ಮೂಲಕ ತಮ್ಮ ಪಕ್ಷದ ಗೆಲುವನ್ನು ಸಂಭ್ರಮಿಸಿದರು. ಮಹಿಳಾ ಕಾರ್ಯಕರ್ತರು ಟಮಟೆ, ಡೊಳ್ಳಿನ ಶಬ್ದಕ್ಕೆ ಪರಸ್ಪರ ಕೈ ಜೋಡಿಸಿ ಕುಣಿಯುವ ಮೂಲಕ ಸಂಭ್ರಮಿಸಿದರು.
ಈ ವೇಳೆ ಕಾಂಗ್ರೆಸ್ ಕಾರ್ಯಕರ್ತ ಮಂಜುನಾಥ್ ಮಾತನಾಡಿ, ಕಾಂಗ್ರೆಸ್-ಜೆಡಿಎಸ್ನ ಗೆಲುವು ಇಡೀ ರಾಜ್ಯದ ಜನತೆಯ ಗೆಲುವಾಗಿದೆ. ಬಿಜೆಪಿ ಷಡ್ಯಂತ್ರಗಳು ಕರ್ನಾಟಕದಲ್ಲಿ ನಡೆಯುವುದಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಕಾಂಗ್ರೆಸ್ ಗೆಲುವಿಗೆ ಕಾರ್ಯಕರ್ತರಲ್ಲಿ ಹರ್ಷ ಮನೆ ಮಾಡಿದೆ ಎಂದು ಸಂತಸ ವ್ಯಕ್ತಪಡಿಸಿದರು.