ಶಿಕ್ಷಣ ಕ್ಷೇತ್ರವನ್ನು ನಿರ್ಲಕ್ಷಿಸಿದ ರಾಜ್ಯ ಬಜೆಟ್: ಎಸ್ಎಫ್ಐ ಆರೋಪ
ಬೆಂಗಳೂರು, ಜು.6: ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಂಡಿಸಿರುವ ರಾಜ್ಯ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಆರೋಪಿಸಿದೆ.
ಗುರುವಾರ ಮುಖ್ಯಮಂತ್ರಿ ಮಂಡಿಸಿದ ರಾಜ್ಯ ಬಜೆಟ್ನಲ್ಲಿ ಕಳೆದ ಬಾರಿ ಶಿಕ್ಷಣಕ್ಕೆ 11.78 ರಷ್ಟು ಹಣ ಮೀಸಲಿಟ್ಟಿದ್ದ ಹಣವನ್ನು ಕಡಿತ ಮಾಡಿ ಶೇ.11 ರಷ್ಟು ಹಣ ಮೀಸಲಿಟ್ಟಿದ್ದಾರೆ. ಸರಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿರುವ ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮದ ತರಗತಿಗಳನ್ನು ಪ್ರಾಯೋಗಿಕವಾಗಿ 1000 ಶಾಲೆಗಳಲ್ಲಿ ಪ್ರಾರಂಭಿಸುವ, ಎಲ್ಕೆಜಿ, ಯುಕೆಜಿ ತರಗತಿಗಳ ಆರಂಭ ಮತ್ತು ಬಾಲಸ್ನೇಹಿ ಕೇಂದ್ರಗಳ ಬಲವರ್ಧನೆಗೆ ಮುಂದಾಗಿರುವ ಕ್ರಮ ಸ್ವಾಗತಾರ್ಹ. ಆದರೆ, ಇದೇ ಸಂದರ್ಭದಲ್ಲಿ 28,847 ಸರಕಾರ ಮತ್ತು ಅನುದಾನಿತ ಶಾಲೆಗಳನ್ನು ಹತ್ತಿರದ ಶಾಲೆಗಳೊಂದಿಗೆ ವಿಲೀನ ಮಾಡಲು ಮುಂದಾಗಿರುವ ಕ್ರಮ ಖಂಡನೀಯ. ಸರಕಾರಿ ಶಾಲೆಗಳಲ್ಲಿ ಕಡಿಮೆ ದಾಖಲಾತಿಗೆ ಇರುವ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಿ, ಶಿಕ್ಷಣ ತಜ್ಞರ ಮತ್ತು ವಿದ್ಯಾರ್ಥಿ ಸಂಘಟನೆಗಳ ಸಲಹೆಗಳನ್ನು ಆಲಿಸಿ ದಾಖಲಾತಿ ಹೆಚ್ಚಿಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಪಡಿಸಿದೆ.
ರಾಜ್ಯದಲ್ಲಿ ಉನ್ನತ ಶಿಕ್ಷಣ ಮತ್ತು ವೈದ್ಯಕೀಯ ಶಿಕ್ಷಣ ಅಗತ್ಯ ಅನುದಾನವಿರದೆ ಖಾಯಂ ಸಿಬ್ಬಂದಿ ವರ್ಗ, ಉತ್ತಮ ಕಟ್ಟಡ ಸೇರಿದಂತೆ ಹಲವಾರು ಮೂಲಭೂತ ಸಮಸ್ಯೆಗಳನ್ನು ಎದುರಿಸುತ್ತಿದೆ. ಅವುಗಳನ್ನು ಪರಿಹರಿಸಲು ಬಜೆಟ್ನಲ್ಲಿ ಸೂಕ್ತ ಪರಿಹಾರ ನೀಡದೇ ವಂಚಿಸಲಾಗಿದೆ. ಅಲ್ಲದೆ, ಕ್ರೀಡೆ, ಪ್ರವಾಸೋದ್ಯಮ, ಚಲನಚಿತ್ರ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕ್ರೀಡಾ ವಿಶ್ವವಿದ್ಯಾಲಯ, ಪ್ರವಾಸೋದ್ಯಮ ವಿಶ್ವವಿದ್ಯಾಲಯ, ಚಲನಚಿತ್ರ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದು ಒಳ್ಳೆಯ ನಿರ್ಧಾರ. ಆದರೆ, ಅದನ್ನು ಖಾಸಗಿ ಸಹಭಾಗಿತ್ವದಲ್ಲಿ ಮಾಡಲು ಮುಂದಾಗಬಾರದು ಎಂದು ಎಸ್ಎಫ್ಐ ಆಗ್ರಹಿಸಿದೆ.
ಹಿಂದಿನ ರಾಜ್ಯ ಸರಕಾರ 19.60 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡುವುದಾಗಿ ಘೋಷಿಸಿತ್ತು. ಸಿಎಂ ಕುಮಾರಸ್ವಾಮಿ ಹಿಂದಿನ ಸರಕಾರದ ಬಜೆಟ್ನ ಎಲ್ಲ ಯೋಜನೆಗಳು ಮುಂದುವರೆಯಲಿವೆ ಎಂದು ಪ್ರತಿಪಾದಿಸಿದ್ದಾರೆ. ಆದರೆ, ಉಚಿತ ಬಸ್ಪಾಸ್ ಬಗ್ಗೆ ಬಜೆಟ್ನಲ್ಲಿ ಪ್ರಸ್ತಾಪಿಸದೆ, ಅನುದಾನ ಹಂಚಿಕೆ ಮಾಡದೆ ವಿದ್ಯಾರ್ಥಿ ಸಮುದಾಯಕ್ಕೆ ದ್ರೋಹ ಬಗೆದಿದೆ ಎಂದು ಎಸ್ಎಫ್ಐ ರಾಜ್ಯಾಧ್ಯಕ್ಷ ವಿ.ಅಂಬರೀಶ್ ಪ್ರಕಟನೆಯಲ್ಲಿ ಆರೋಪಿಸಿದ್ದಾರೆ.