ಎಸ್ಸಿ, ಎಸ್ಟಿ ಸ್ಮಶಾನ ಭೂಮಿ ಖರೀದಿಗೆ 1.25 ಕೋಟಿ ಬಿಡುಗಡೆ: ಆರ್.ವಿ.ದೇಶಪಾಂಡೆ
ಬೆಂಗಳೂರು, ಜು.11: ಗ್ರಾಮಾಂತರ ಪ್ರದೇಶಗಳಲ್ಲಿ ಸ್ಮಶಾನ ಭೂಮಿ ಖರೀದಿ ಹಾಗೂ ಸ್ಮಶಾನದ ಸ್ಥಳಗಳಲ್ಲಿ ಇನ್ನಿತರ ಸೌಲಭ್ಯಗಳನ್ನು ಒದಗಿಸಲು ಬೀದರ್ ಜಿಲ್ಲೆಯ ಪರಿಶಿಷ್ಟ ಜಾತಿಗೆ 1 ಕೋಟಿ ಹಾಗೂ ಪರಿಶಿಷ್ಟ ಪಂಗಡಕ್ಕೆ 25 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.
ಬುಧವಾರ ವಿಧಾನ ಪರಿಷತ್ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಟಿ.ಎ.ಶರವಣ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೀದರ್ ಜಿಲ್ಲೆ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಸ್ಮಶಾನ ನಿರ್ಮಾಣಕ್ಕೆ ಜಮೀನು ಸಿಗುತ್ತಿಲ್ಲ. ಆದರೂ ಸರಕಾರ ಜಮೀನು ಖರೀದಿಗೆ ಎಲ್ಲ ರೀತಿಯ ಪ್ರಯತ್ನ ನಡೆಸಿದೆ. ಹಾಗೂ ಹಣವನ್ನೂ ಬಿಡುಗಡೆ ಮಾಡಿದೆ ಎಂದು ಹೇಳಿದರು.
ಬಿಜೆಪಿ ಸದಸ್ಯ ರಘುನಾಥರಾವ್ ಮಲ್ಕಾಪೂರೆ ಮಾತನಾಡಿ, ಬೀದರ್ ಜಿಲ್ಲೆಯಲ್ಲಿ ಎಸ್ಸಿ, ಎಸ್ಟಿ ಜನಾಂಗದವರು ಸತ್ತರೆ ಮಣ್ಣು ಮಾಡಲು ಸ್ಮಶಾನಗಳೆ ಇಲ್ಲ. ಮೇಲ್ಜಾತಿಯವರ ರುದ್ರಭೂಮಿಯಲ್ಲಿ ಎಸ್ಸಿ, ಎಸ್ಟಿ ಜನಾಂಗದ ಮೃತರನ್ನು ಮಣ್ಣು ಮಾಡಲು ಹೋದರೆ ಮೇಲ್ಜಾತಿಯವರು ಗಲಾಟೆ ಮಾಡುತ್ತಾರೆ. ಇಂತಹ ಘಟನೆಗಳು ಸಾಕಷ್ಟು ನಡೆದಿವೆ ಎಂದು ಹೇಳಿದರು.