ವೈದ್ಯಕೀಯ ಶಿಕ್ಷಣ ಸಂಸ್ಥೆಯಲ್ಲಿ ಸುನ್ನಿ ಸಮುದಾಯದವರಿಗೆ ಮಾತ್ರ ಮೀಸಲು ವಿಚಾರ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು, ಜು.18: ಮಂಗಳೂರಿನ ಕಣಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮುಸ್ಲಿಂ ಧರ್ಮದ ಸುನ್ನಿ ಸಮುದಾಯದವರಿಗಷ್ಟೇ ಮೀಸಲು ನಿಗದಿಪಡಿಸಲು ಸರಕಾರಕ್ಕೆ ನಿರ್ದೇಶಿಸಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಹೆಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.
ಮಂಗಳೂರಿನ ಕಣಚೂರು ಇಸ್ಲಾಮಿಕ್ ಎಜುಕೇಷನ್ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಎ.ಎಸ್ ಬೋಪಣ್ಣ ಹಾಗೂ ನ್ಯಾಯಮೂರ್ತಿ ಮೊಹಮ್ಮದ್ ನವಾಝ್ ಅವರಿದ್ದ ವಿಭಾಗೀಯ ನ್ಯಾಯಪೀಠ, ವಕೀಲರ ವಾದ ಪ್ರತಿವಾದವನ್ನು ಆಲಿಸಿ ತೀರ್ಪನ್ನು ಕಾಯ್ದಿರಿಸಿತು.
ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಮಧುಸೂದನ್ ಆರ್. ನಾಯಕ್ ಅವರು, ಸಂವಿಧಾನದ ಅನುಚ್ಛೇದ 30ರ ಅಡಿ ಧಾರ್ಮಿಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಅವಕಾಶವಿದ್ದು, ಆ ಪ್ರಕಾರ ಸುನ್ನಿ ಸಮುದಾಯಕ್ಕೆ ಮೀಸಲು ಕಲ್ಪಿಸುವಂತೆ ಸರಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿದರು.
ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ 150 ವೈದ್ಯಕೀಯ ಸೀಟುಗಳಿದ್ದು ಅವುಗಳಲ್ಲಿ 38 ಸೀಟುಗಳನ್ನು ಸರಕಾರಿ ಕೋಟಾದಡಿ ಬಿಟ್ಟುಕೊಡಲಾಗಿದೆ. ಇನ್ನುಳಿದ 82 ಸೀಟುಗಳನ್ನು ಕಾಲೇಜು ಆಡಳಿತ ಮಂಡಳಿ ಸುನ್ನಿ ಸಮುದಾಯಕ್ಕೆ ಮೀಸಲಿರಿಸಲು ಅವಕಾಶ ನೀಡಬೇಕು. ಈಗಾಗಲೇ ಸೇಂಟ್ ಜೋಸೆಫ್ ವೈದ್ಯಕೀಯ ಕಾಲೇಜಿನಲ್ಲಿ ಇದೇ ರೀತಿ ರೋಮನ್ ಕ್ಯಾಥೋಲಿಕ್ ಕ್ರಿಶ್ಚಿಯನ್ ಸಮುದಾಯಕ್ಕೆ ಮೀಸಲಿರಿಸಲಾಗಿದೆ. ಅದೇ ರೀತಿ ಕಣಚೂರು ವೈದ್ಯಕೀಯ ಕಾಲೇಜಿಗೂ ಮಾನ್ಯತೆ ನೀಡಬೇಕು ಎಂದು ಕೋರಿದರು.
ಸುನ್ನಿ ಸಮುದಾಯದವರು ಎಂಜಿನಿಯರ್, ವೈದ್ಯಕೀಯ ಸೀಟು ಪಡೆಯಲು ಬೇರೆ ಧರ್ಮಗಳ ಕಾಲೇಜು ಶಿಕ್ಷಣ ಸಂಸ್ಥೆಗಳಿಗೆ ಹೋದರೆ 70 ರಿಂದ 80 ಲಕ್ಷ ರೂ.ಹಣವನ್ನು ಕೇಳುತ್ತಾರೆ. ಅಲ್ಲದೆ, ಸೇಂಟ್ ಜೋಸೆಫ್ ವೈದ್ಯಕೀಯ ಕಾಲೇಜು ಸೇರಿದಂತೆ ಇತರೆ ಧರ್ಮಗಳ ಕಾಲೇಜು ಶಿಕ್ಷಣ ಸಂಸ್ಥೆಗಳು ತಮ್ಮ ಸಮುದಾಯದವರಿಗೆ ಮಾತ್ರ ಮೀಸಲಿರಿಸಿವೆ ಎಂದು ಪೀಠಕ್ಕೆ ತಿಳಿಸಿದರು.
ಸರಕಾರದ ಪರ ವಾದಿಸಿದ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ಅವರು, ಜಮ್ಮು ಕಾಶ್ಮಿರ್, ತೆಲಂಗಾಣ ಸೇರಿ ಇನ್ನಿತರ ರಾಜ್ಯಗಳಲ್ಲಿ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳು, ಮುಸ್ಲಿಂ ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಅಂಕಗಳನ್ನು ಪಡೆದ ಎಲ್ಲ ಧರ್ಮಗಳ ವಿದ್ಯಾರ್ಥಿಗಳಿಗೆ ವೈದ್ಯಕೀಯ ಹಾಗೂ ಎಂಜಿನಿಯರ್ ಸೀಟುಗಳನ್ನು ನೀಡಿರುವ ಉದಾಹರಣೆಗಳಿವೆ ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠವು ತೀರ್ಪುನ್ನು ಕಾಯ್ದಿರಿಸಿತು.