ಹೈ ವೋಲ್ಟೇಜ್ ಲೈನ್ ಕಾಮಗಾರಿ ಸ್ಥಗಿತಕ್ಕೆ ಒತ್ತಾಯ: ವಿಧಾನಸೌಧದ 3ನೆ ಮಹಡಿಯಲ್ಲಿ ರೈತರ ಧರಣಿ
ಬೆಂಗಳೂರು, ಜು.24: ರೈತರಿಗೆ ಪರಿಹಾರವನ್ನು ನೀಡದೆ ಪವರ್ ಗ್ರಿಡ್ ಕಾರ್ಪೊರೇಷನ್ ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶದ ರೈತರ ಜಮೀನಿನಲ್ಲಿ 400ಕೆವಿ ಹೈ ವೋಲ್ಟೇಜ್ ಲೈನ್ ಅಳವಡಿಸುವುದಕ್ಕೆ ಅವಕಾಶ ನೀಡಬಾರದೆಂದು ರೈತರು ವಿಧಾನಸೌಧದ ಮೂರನೆ ಮಹಡಿಯಲ್ಲಿ ಪ್ರತಿಭಟನೆ ನಡೆಸಿದರು
ಕಳೆದ 5 ವರ್ಷದಿಂದ ಈ ಕಾಮಗಾರಿ ನಡೆಯುತ್ತಿದ್ದು, ಸೂಕ್ತ ಪರಿಹಾರ ನೀಡದೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ. ಬೆಳೆದು ನಿಂತ ಫಸಲುಗಳನ್ನು ನಾಶ ಮಾಡಿ ಕಾಮಗಾರಿ ಕೈಗೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಪ್ರತಿಭಟನಾನಿರತ ರೈತರು ತಿಳಿಸಿದರು.
ಪ್ರಭಾವಿ ವ್ಯಕ್ತಿಗಳ ಜಮೀನು ಬಿಟ್ಟು, ಕೆಲವೆಡೆ ಮೂಲ ನಕ್ಷೆಗೆ ಹೊರತಾಗಿ ಅನ್ಯ ಮಾರ್ಗವಾಗಿ ಕಾಮಗಾರಿ ನಡೆಸುತ್ತಿದ್ದಾರೆ. ಈ ಬಗ್ಗೆ ಹಲವು ಬಾರಿ ಗಮನ ಸೆಳೆದರೂ ಪ್ರಯೋಜನವಾಗಿಲ್ಲ. ಹೀಗಾಗಿ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯನ್ನು ಭೇಟಿ ಮಾಡಲು ಬೆಳಗ್ಗೆಯಿಂದ ಕಾದಿದ್ದೆವು. ಆದರೆ, ಭೇಟಿ ಅವಕಾಶ ನೀಡದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಲಾಯಿತು ಎಂದು ಅವರು ರೈತರು ತಿಳಿಸಿದರು.
ರೈತರು ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸುತ್ತಿರುವುದನ್ನು ತಿಳಿದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೆಲವರನ್ನು ಮಾತುಕತೆಗೆ ಕರೆದು, ಚರ್ಚೆ ನಡೆಸಿದರು. ರೈತರಿಗೆ ಪರಿಹಾರ ನೀಡದೆ ಕಾಮಗಾರಿ ನಡೆಸುತ್ತಿರುವುದನ್ನು ಕೂಡಲೆ ಸ್ಥಗಿತಗೊಳಿಸಿ ಆದೇಶ ನೀಡಲಾಗುವುದು. ಕೂಡಲೆ ಪವರ್ ಗ್ರಿಡ್ ಕಾರ್ಪೊರೇಷನ್ನ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
-ಕೋಡಿಹಳ್ಳಿ ಚಂದ್ರಶೇಖರ್ ರೈತ ಮುಖಂಡ