ಬೆಂಗಳೂರು: ಆಗಸ್ಟ್ 2-3ಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಬಹಿರಂಗ ವಿಚಾರಣೆ
ಬೆಂಗಳೂರು, ಜು. 28: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಬಹಿರಂಗ ವಿಚಾರಣೆ ಆಗಸ್ಟ್ 2 ಮತ್ತು 3ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಇಂದಿಲ್ಲಿ ಪ್ರಕಟಿಸಿದ್ದಾರೆ.
ಶನಿವಾರ ಆಯೋಗದ ಭೇಟಿಗೆ ಸಂಬಂಧಿಸಿದಂತೆ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡುತ್ತಿದ್ದ ಅವರು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಎಚ್.ಎಲ್. ದತ್ತು, ಸದಸ್ಯರಾದ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್, ನ್ಯಾಯಮೂರ್ತಿ ಡಿ.ಮುರುಗೇಶನ್ ಹಾಗೂ ಜ್ಯೋತಿಕ ಕಾಲ್ರಾ ಅವರನ್ನು ಒಳಗೊಂಡ ಪೂರ್ಣಪೀಠ ವಿಕಾಸಸೌಧದಲ್ಲಿ ವಿಶೇಷವಾಗಿ ರೂಪಿಸಿರುವ ನಾಲ್ಕು ನ್ಯಾಯಾಂಗಣ ಸಭಾಂಗಣದಲ್ಲಿ ಬಹಿರಂಗ ವಿಚಾರಣೆ ನಡೆಸಲಿದೆ ಎಂದರು.
ಈ ಬಹಿರಂಗ ವಿಚಾರಣೆಯಲ್ಲಿ ರಾಜ್ಯಾದ್ಯಂತ ಮಾನವ ಹಕ್ಕುಗಳ ಉಲ್ಲಂಘನೆಯ 200 ಪ್ರಕರಣಗಳ ವಿಚಾರಣೆ ನಡೆಯಲಿದೆ. ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಆಸಕ್ತಿ ವಹಿಸಿ ಪ್ರಕರಣಗಳನ್ನು ಇತ್ಯರ್ಥ್ಯಪಡಿಸಲು ಆಯೋಗಕ್ಕೆ ಸೂಕ್ತ ನೆರವು ಒದಗಿಸಬೇಕೆಂದು ಮುಖ್ಯ ಕಾರ್ಯದರ್ಶಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.