ಪ್ರವಾಹಪೀಡಿತ ಕೇರಳದ ನೆರವಿಗೆ ಧಾವಿಸಿದ ಕರ್ನಾಟಕ
10 ಕೋಟಿ ರೂ. ಮೌಲ್ಯದ ಪರಿಹಾರ ಸಾಮಗ್ರಿಗಳ ರವಾನೆಗೆ ಸಿಎಂ ಸೂಚನೆ
ಬೆಂಗಳೂರು, ಆ.10: ಭಾರೀ ಮಳೆಯಿಂದ ಉಂಟಾಗಿರುವ ಪ್ರವಾಹದಿಂದ ತತ್ತರಿಸಿರುವ ಕೇರಳಕ್ಕೆ ಕರ್ನಾಟಕವು ಸಹಾಯಹಸ್ತ ಚಾಚಿದೆ. ಕೇರಳಕ್ಕೆ 10 ಕೋಟಿ ರೂ. ಮೌಲ್ಯದ ಪರಿಹಾರ ಸಾಮಗ್ರಿಗಳನ್ನು ರವಾನೆ ಮಾಡಲು ಹಾಗೂ ವೈದ್ಯರ ತಂಡ ಕಳುಹಿಸಿ ಕೊಡುವಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿರ್ದೇಶನ ನೀಡಿದ್ದಾರೆ.
ಪ್ರವಾಹ ಪರಿಸ್ಥಿತಿ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಾತುಕತೆ ನಡೆಸಿರುವ ಕುಮಾರಸ್ವಾಮಿ, ಪ್ರವಾಹಕ್ಕೆ 22 ಮಂದಿ ಬಲಿಯಾಗಿರುವುದಕ್ಕೆ ತೀವ್ರ ವಿಷಾದ ವ್ಯಕ್ತಪಡಿಸಿದರು. ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಅಗತ್ಯವಿರುವ ಎಲ್ಲ ರೀತಿಯ ನೆರವು ನೀಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ.
‘‘ಪ್ರವಾಹ ಪರಿಸ್ಥಿತಿ ಎದುರಿಸಲು ಕೇರಳ ಸರಕಾರಕ್ಕೆ ಎಲ್ಲ ರೀತಿಯ ನೆರವು ನೀಡಲಾಗುವುದು. ಈಗಾಗಲೇ ಕಬಿನಿಯ ಹಿನ್ನೀರಿನಿಂದ ಪ್ರವಾಹ ಸಮಸ್ಯೆ ಉಲ್ಬಣಗೊಳ್ಳುತ್ತಿರುವ ಕುರಿತು ಕೇರಳ ಸರಕಾರ ಮಾಡಿರುವ ಮನವಿಗೆ ಸ್ಪಂದಿಸಿದ 75,000 ಕ್ಯೂಸೆಕ್ಸ್ ನೀರನ್ನು ಕಬಿನಿ ಜಲಾಶಯದಿಂದ ಬಿಡಲಾಗುತ್ತಿದೆ’’ ಎಂದು ಸಿಎಂ ತಿಳಿಸಿದ್ದಾರೆ.