ಕರ್ನಾಟಕವನ್ನು ನಿರ್ಲಕ್ಷಿಸುತ್ತಿರುವ ಪ್ರಧಾನಿ ಮೋದಿ: ಸಂಸದ ಡಿ.ಕೆ.ಸುರೇಶ್
ಬೆಂಗಳೂರು, ಆ.20: ಕೇರಳ ರಾಜ್ಯದಲ್ಲಿ ಮಳೆಯಿಂದ ಉಂಟಾಗಿರುವ ಅನಾಹುತಗಳ ಬಗ್ಗೆ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ನರೇಂದ್ರಮೋದಿ, ಪಕ್ಕದಲ್ಲೆ ಇರುವ ನಮ್ಮ ರಾಜ್ಯದ ಕೊಡಗು ಜಿಲ್ಲೆಯಲ್ಲಿನ ಸಮಸ್ಯೆಗಳ ಬಗ್ಗೆ ಗಮನ ಹರಿಸಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯವನ್ನು ನಿರ್ಲಕ್ಷಿಸುವ ಮೂಲಕ ಪ್ರಧಾನಿ ರಾಜಕೀಯ ದ್ವೇಷ ಸಾಧಿಸುತ್ತಿದ್ದಾರೆ. ಅವರ ಈ ವರ್ತನೆಯಿಂದ ಕೊಡಗಿನ ವೀರಯೋಧರ ಕುಟುಂಬಗಳಿಗೆ ಅವಮಾನ ಮಾಡಿದಂತಾಗಿದೆ ಎಂದರು.
ಕಳೆದ 100 ವರ್ಷಗಳಲ್ಲೆ ಕಂಡು ಕೇಳರಿಯದ ಮಳೆ ಸುರಿದು, ಉಂಟಾಗಿರುವ ಅನಾಹುತಗಳು ಈ ವರ್ಷ ಸಂಭವಿಸಿದೆ. ಬಹಳಷ್ಟು ಮನೆಗಳು ಕೊಚ್ಚಿ ಹೋಗಿವೆ, ಸಂಪರ್ಕ ರಸ್ತೆಗಳು ಹಾಳಾಗಿವೆ. ಕೋಟ್ಯಂತರ ರೂ.ಗಳ ಆಸ್ತಿ-ಪಾಸ್ತಿ, ಜನ ಜಾನುವಾರುಗಳ ಪ್ರಾಣ ಹಾನಿಯೂ ಆಗಿದೆ ಎಂದು ಸುರೇಶ್ ತಿಳಿಸಿದರು.
ಜಲಪ್ರಳಯದಿಂದಾಗಿ ಜನ ಜೀವನ ಬೀದಿಗೆ ಬಿದ್ದಿದೆ. ಸಾವಿರಾರು ಮಂದಿ ತಮ್ಮ ಮನೆಗಳನ್ನು ಕಳೆದುಕೊಂಡು ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಜನರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಮಾಧ್ಯಮಗಳು ಕ್ಷಣ ಕ್ಷಣದ ಮಾಹಿತಿ ಬಿತ್ತರಿಸುತ್ತಿವೆ. ಆದರೂ, ಸರಕಾರ ಮನವಿ ಸಲ್ಲಿಸಿಲ್ಲ ಎಂಬ ಕುಂಟು ನೆಪ ಹೇಳಿಕೊಂಡು ರಾಜ್ಯದಲ್ಲಿ ವೈಮಾನಿಕ ಸಮೀಕ್ಷೆ ನಡೆಸದಿರುವುದು ಕೇಂದ್ರ ಸರಕಾರದ ಮಲತಾಯಿ ಧೋರಣೆಯನ್ನು ಪ್ರದರ್ಶಿಸುತ್ತದೆ ಎಂದು ಅವರು ದೂರಿದರು.