ಆ.24: ಕೊಡಗು ಜಿಲ್ಲೆಗೆ ರಕ್ಷಣಾ ಸಚಿವೆ ಭೇಟಿ
ಬೆಂಗಳೂರು, ಆ. 23: ಸತತ ಮಳೆ-ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕೊಡಗು ಜಿಲ್ಲೆಯ ನಿರಾಶ್ರಿತರ ಕೇಂದ್ರಕ್ಕೆ ನಾಳೆ(ಆ.24) ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ನಾಳೆ ಬೆಳಗ್ಗೆ 8:30ಕ್ಕೆ ಮೈಸೂರಿನಿಂದ ಹೊರಟು 9ಕ್ಕೆ ಹಾರಂಗಿ ಹೆಲಿಪ್ಯಾಡ್ ತಲುಪಲಿದ್ದಾರೆ. ಅನಂತರ ಕುಶಾಲನಗರ ನೆರೆ ಪೀಡಿತ ಪ್ರದೇಶಗಳಾದ ಕುವೆಂಪು ಬಡಾವಣೆ, ಸಾಯಿ ಬಡಾವಣೆಗಳಲ್ಲಿ ಸಂತ್ರಸ್ತರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ. 10:30ಕ್ಕೆ ಮಾದಾಪುರದಲ್ಲಿ ಭೂಕುಸಿತಕ್ಕೆ ಒಳಗಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಿಸಲಿದ್ದಾರೆ. 11:15ಕ್ಕೆ ಮೈತ್ರಿ ಹಾಲ್ನಲ್ಲಿರುವ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಜನರ ಅಹವಾಲುಗಳನ್ನು ಆಲಿಸಲಿದ್ದಾರೆ ಎಂದು ತಿಳಿಸಲಾಗಿದೆ.
11:30ಕ್ಕೆ ಕೊಡಗು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಟಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಪರಿಹಾರ ಕಾರ್ಯಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಈ ವೇಳೆ ಅವರೊಂದಿಗೆ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜೆ.ಬೋಪಯ್ಯ ಇರಲಿದ್ದಾರೆ.
ಸತತ ಮಳೆ-ಪ್ರವಾಹಕ್ಕೆ ಸಿಲುಕಿ 21 ಮಂದಿ ಮೃತಪಟ್ಟು, ಅನೇಕ ಮಂದಿ ಆಶ್ರಯ ಕಳೆದುಕೊಂಡಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಗೆ ನೀಡಿರುವ ಹೆಲಿಕಾಪ್ಟರ್, ಸೇನಾಪಡೆ ಕಾರ್ಯಾಚರಣೆ ಬಗ್ಗೆಯೂ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.
ಪ್ರಧಾನಿಗೆ ವರದಿ ಸಾಧ್ಯತೆ: ಮಳೆ-ಪ್ರವಾಹ, ಗುಡ್ಡ ಕುಸಿತದಿಂದ ಎಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ ಎಂಬುದರ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ನಂತರ ಪ್ರಧಾನಿ ಕಚೇರಿಗೆ ಅದನ್ನು ತಲುಪಿಸಿ ಕರ್ನಾಟಕಕ್ಕೆ ಹೆಚ್ಚಿನ ಹಣಕಾಸು ನೆರವು ನೀಡುವಂತೆ ಪ್ರಧಾನಿ ಮೋದಿಯವರಿಗೆ ಸಚಿವೆ ನಿರ್ಮಲಾ ಸೀತಾರಾಮನ್ ಮನವಿ ಮಾಡುವ ಸಾಧ್ಯತೆಗಳಿವೆ ಎಂದು ಗೊತ್ತಾಗಿದೆ.