ಥಣಿಸಂದ್ರ ಡಿನೋಟಿಫಿಕೇಷನ್ ಪ್ರಕರಣ: ಎಚ್.ಡಿ. ಕುಮಾರಸ್ವಾಮಿ ಆರೋಪಮುಕ್ತ
ಬೆಂಗಳೂರು, ಆ.27: ಥಣಿಸಂದ್ರ ಅಕ್ರಮ ಡಿನೋಟಿಫಿಕೇಷನ್ ಆರೋಪದಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕೈಬಿಡಲಾಗಿದೆ. ಈ ಕುರಿತಂತೆ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಡಿ.ಪಾಟೀಲ ಸೋಮವಾರ ವಿಲೇವಾರಿ ಮಾಡಿದ್ದಾರೆ.
ಪ್ರಕರಣದ ಆರೋಪಿಗಳಾದ ನಿವೃತ್ತ ಐಎಎಸ್ ಅಧಿಕಾರಿ ಜ್ಯೋತಿ ರಾಮಲಿಂಗಂ, ಜಮೀನಿನ ಮಾಲಕರಾದ ಎ.ವಿ.ರವಿಪ್ರಕಾಶ್, ಎ.ವಿ. ಶ್ರೀರಾಮ್ ಅವರನ್ನೂ ಕೈಬಿಡಲಾಗಿದೆ.
ಪ್ರಕರಣವೇನು: 2007 ರಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅರ್ಕಾವತಿ ಬಡಾವಣೆ ನಿರ್ಮಾಣದ ಉದ್ದೇಶಕ್ಕೆ ಜಮೀನು ವಶಪಡಿಸಿಕೊಳ್ಳಲಾಗಿತ್ತು. ಇದರಲ್ಲಿ ಬೆಂಗಳೂರು ಉತ್ತರ ತಾಲೂಕಿನ ಥಣಿಸಂದ್ರ ಗ್ರಾಮದ ಸರ್ವೇ ನಂಬರ್ 87/4 ಬಿನಲ್ಲಿ 3 ಎಕರೆ 8 ಗುಂಟೆ ಜಮೀನನ್ನು 2007ರ ಸೆಪ್ಟೆಂಬರ್ 27ರಂದು ಡಿನೋಟಿಫೈ ಮಾಡಿ ಆದೇಶಿಸಲಾಗಿತ್ತು. ಇದನ್ನು ಆಕ್ಷೇಪಿಸಿ ಚಾಮರಾಜನಗರದ ಮಹಾದೇವ ಸ್ವಾಮಿ ಎಂಬುವರು 2011ರಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದರು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ 13 ಸಿ ಮತ್ತು ಡಿ ಹಾಗೂ ಭಾರತೀಯ ದಂಡ ಸಂಹಿತೆ ಕಲಂ 465 (ನಕಲಿ ದಾಖಲೆ ಸೃಷ್ಟಿ ಹಾಗೂ ತಪ್ಪು ದಾಖಲೆ ಸಲ್ಲಿಕೆ) ವಿವಿಧ ಕಲಂಗಳಡಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಅರಣ್ಯ ಸಚಿವ ಸಿ.ಚೆನ್ನಿಗಪ್ಪ, ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಜ್ಯೋತಿ ರಾಮಲಿಂಗಂ, ಜಮೀನಿನ ಮಾಲಕರಾದ ಎ.ವಿ. ರವಿಪ್ರಕಾಶ್ ಹಾಗೂ ಎ.ವಿ.ಶ್ರೀರಾಮ್ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು. ನಂತರದಲ್ಲಿ ಈ ಪ್ರಕರಣವನ್ನು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು.
ಅರ್ಜಿದಾರ ಕುಮಾರಸ್ವಾಮಿ ಪರ ವಾದ ಮಂಡಿಸಿದ ಹಷ್ಮತ್ ಪಾಷ, 2007ರಲ್ಲಿ ಆಗಿರುವ ಡಿನೋಟಿಫಿಕೇಷನ್ ಆದೇಶವನ್ನು ಈತನಕ ಯಾರೂ ಪ್ರಶ್ನೆ ಮಾಡಿಲ್ಲ ಮತ್ತು ಡಿನೋಟಿಫೈ ಆದೇಶವು ಕಾನೂನು ಬಾಹಿರ ಅಲ್ಲ. ಹೀಗಾಗಿ, ಅರ್ಜಿದಾರರನ್ನು ಆರೋಪದಿಂದ ಕೈಬಿಡಬೇಕು ಎಂದು ಕೋರಿದರು.
ದೂರು ದಾಖಲಿಸುವ ಮುನ್ನ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದಿಲ್ಲ. ಡಿನೋಟಿಫೈ ಮಾಡಿದ ನಾಲ್ಕು ವರ್ಷಗಳ ನಂತರ ದೂರು ದಾಖಲಿಸಲಾಗಿದೆ. ಉದ್ದೇಶಪೂರ್ವಕವಾಗಿ ಡಿನೋಟಿಫೈ ಮಾಡಿದ್ದಾರೆ ಎಂಬ ಆರೋಪ ಸಾಬೀತುಪಡಿಸುವ ಅಥವಾ ಅಕ್ರಮ ನಡೆದಿದೆ ಎಂಬುದಕ್ಕೆ ಇಲ್ಲವೇ ಲಂಚ ಪಡೆದಿದ್ದಾರೆ ಎಂಬುದಕ್ಕೆ ಸೂಕ್ತ ಸಾಕ್ಷ್ಯಾಧಾರ ಇಲ್ಲ. ಡಿನೋಟಿಫೈ ಮಾಡಿದ ಜಮೀನನ್ನು ಜಮೀನು ಮಾಲಕರಿಗೆ ಬಿಟ್ಟುಕೊಡಲಾಗಿದೆ. ಬೇರೆಯವರಿಗೆ ಕೊಟ್ಟಿಲ್ಲ.