ಶೀಘ್ರದಲ್ಲೆ ಮಹಾದಾಯಿ ನದಿ ಸ್ಥಳ ಪರಿಶೀಲನೆ: ಡಿ.ಕೆ.ಶಿವಕುಮಾರ್
ಬೆಂಗಳೂರು, ಆ.28: ಮಹಾದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದ್ದು, ಶೀಘ್ರದಲ್ಲೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮಹಾದಾಯಿ ನದಿ ಹರಿಯುವ ಸ್ಥಳದ ಪರಿಶೀಲನೆ ನಡೆಸುವುದಾಗಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೊಂದು ವಾರದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಹೋಗಿ ಸ್ಥಳ ಪರಿಶೀಲನೆ ಮಾಡಿದ ಬಳಿಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೊತೆ ಸಭೆ ನಡೆಸಲಾಗುವುದು ಎಂದರು.
ನ್ಯಾಯಾಧೀಕರಣವು ನೀಡಿರುವ ತೀರ್ಪಿನ ಅನ್ವಯ ಮಹಾದಾಯಿ ವಿಚಾರದಲ್ಲಿ ರಾಜ್ಯ ಸರಕಾರ ಕೈಗೊಳ್ಳಬೇಕಾಗಿರುವ ಮುಂದಿನ ಹೋರಾಟದ ಕುರಿತು ಮುಖ್ಯಮಂತ್ರಿ ಜೊತೆ ನಡೆಸುವ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಿವಕುಮಾರ್ ಹೇಳಿದರು.
ಮಹಾದಾಯಿ ನ್ಯಾಯಾಧೀಕರಣ ನೀಡಿರುವ ತೀರ್ಪನ್ನು ಸಂಬಂಧಪಟ್ಟ ಬೇರೆ ರಾಜ್ಯಗಳು ಯಾವ ರೀತಿಯಲ್ಲಿ ಸ್ವೀಕರಿಸಿವೆ ಎಂಬುದರ ಕುರಿತು ತಮಗೆ ಯಾವುದೇ ಮಾಹಿತಿಯಿಲ್ಲ. ಆದರೆ, ನಮ್ಮ ರಾಜ್ಯಕ್ಕೆ ಮಾತ್ರ ಈ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ಅವರು ಹೇಳಿದರು.
ಗೋವಾ ಹಾಗೂ ಮಹಾರಾಷ್ಟ್ರದವರು ಏನಾದರೂ ಮಾಡಿಕೊಳ್ಳಲಿ. ನಾವು ನಮ್ಮ ರಾಜ್ಯದ ಹಿತವನ್ನು ಕಾಪಾಡಲು ಬದ್ಧರಾಗಿದ್ದೇವೆ. ಇದಕ್ಕಾಗಿ ಯಾವ ತ್ಯಾಗಕ್ಕಾದರೂ ನಾವು ಸಿದ್ಧವಾಗಿದ್ದೇವೆ ಎಂದು ಶಿವಕುಮಾರ್ ತಿಳಿಸಿದರು.
ಮಹಾದಾಯಿ ವಿಚಾರದಲ್ಲಿ ಯಾರೂ ರಾಜಕೀಯ ಮಾಡುವುದಿಲ್ಲ. ರಾಜ್ಯದ ನೆಲ, ಜಲ, ಭಾಷೆ ವಿಚಾರದಲ್ಲಿ ಎಲ್ಲ ಪಕ್ಷಗಳು ಒಗ್ಗಟ್ಟಾಗಿ ಇರಲಿವೆ. ಕಾನೂನು ಹೋರಾಟಕ್ಕೂ ನಾವು ಸಿದ್ಧರಿದ್ದೇವೆ. ರಾಜ್ಯದ ಹಿತಕ್ಕಾಗಿ ಎಲ್ಲರೂ ಒಗ್ಗಟ್ಟಾಗಿಯೇ ಹೋರಾಟ ಮಾಡುತ್ತೇವೆ ಎಂದು ಶಿವಕುಮಾರ್ ಹೇಳಿದರು.