ವೋಟರ್ ಐಡಿ ಪತ್ತೆ ಪ್ರಕರಣ: ಶಾಸಕ ಮುನಿರತ್ನಗೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಆ.28: ಆರ್ಆರ್ ನಗರ ಕ್ಷೇತ್ರದ ಜಾಲಹಳ್ಳಿ ಅಪಾರ್ಟ್ಮೆಂಟ್ನಲ್ಲಿ ವೋಟರ್ ಐಡಿ ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ಶಾಸಕ ಮುನಿರತ್ನಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಜೆ.ಪಿ.ನಗರದ ನಿವಾಸಿ ಪಿ.ಎಂ.ಮುನಿರಾಜುಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಮಳೀಮಠ ಅವರಿದ್ದ ನ್ಯಾಯಪೀಠ, ಈ ಆದೇಶ ನೀಡಿತು.
ಅರ್ಜಿದಾರರ ಪರ ವಾದಿಸಿದ ವಕೀಲ ಎಂ.ಶಿವಪ್ರಕಾಶ್, ಆರ್ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರು ನಕಲಿ ವೋಟರ್ ಐಡಿಗಳನ್ನು ಸೃಷ್ಟಿಸಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದಾರೆ. ಹೀಗಾಗಿ, ಇವರ ಶಾಸಕ ಸ್ಥಾನವನ್ನು ಅನರ್ಹಗೊಳಿಸಿ, ಎರಡನೆ ಸ್ಥಾನದಲ್ಲಿರುವ ಅಭ್ಯರ್ಥಿಯನ್ನು ಶಾಸಕ ಎಂದು ಘೋಷಿಸಲು ಚುನಾವಣೆ ಆಯೋಗಕ್ಕೆ ನಿರ್ದೇಶಿಸಬೇಕೆಂದು ಪೀಠಕ್ಕೆ ತಿಳಿಸಿದರು.
ವಕೀಲರ ವಾದ ಆಲಿಸಿದ ನ್ಯಾಯಪೀಠವು ಮುನಿರತ್ನಗೆ ನೋಟಿಸ್ ಜಾರಿಗೊಳಿಸಿ, ನಾಲ್ಕು ವಾರದಲ್ಲಿ ಕೋರ್ಟ್ಗೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶನ ನೀಡಿತು. ಜಾಲಹಳ್ಳಿ ಅಪಾರ್ಟ್ಮೆಂಟ್ನಲ್ಲಿ 9 ಸಾವಿರಕ್ಕೂ ಹೆಚ್ಚು ವೋಟರ್ ಐಡಿಗಳು ಪತ್ತೆಯಾಗಿದ್ದವು. ಮುನಿರತ್ನ ವಿರುದ್ಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿದ್ದವು.