ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ: ಮಣಿಪಾಲದ ಆದಿತ್ಯ ರಾವ್ ಸೆರೆ
ಬೆಂಗಳೂರು, ಆ.29: ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಹುಸಿ ಕರೆ ಮಾಡಿ ಬೆದರಿಸುತ್ತಿದ್ದ ಆರೋಪದಡಿ ಉಡುಪಿ ಜಿಲ್ಲೆಯ ಮಣಿಪಾಲದ ಆದಿತ್ಯರಾವ್(34) ಎಂಬಾತನನ್ನು ಕೆಐಎಎಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಆದಿತ್ಯ ರಾವ್ ಬಿಇ ಮತ್ತು ಎಂಬಿಎ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಕೆಲ ತಿಂಗಳ ಹಿಂದೆ ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸಕ್ಕೆ ಸೇರಿದ್ದ ಎನ್ನಲಾಗಿದೆ. ವಿಮಾನ ನಿಲ್ದಾಣದ ಕೆಲ ಅಧಿಕಾರಿಗಳು ತನ್ನನ್ನು ನಿರ್ಲಕ್ಷಿಸಿದ್ದಾರೆ ಎಂದು ಕೆಲಸಕ್ಕೆ ರಾಜೀನಾಮೆ ನೀಡಿದ್ದ. ಇದೇ ಕೋಪಕ್ಕೆ ಬೆದರಿಕೆ ಕರೆ ಮಾಡಿದ್ದಾಗಿ ಹೇಳಿಕೆ ನೀಡಿದ್ದಾನೆ. ಈ ಸಂಬಂಧ ಕೆಐಎಎಲ್ ಪೊಲೀಸರು ಆದಿತ್ಯನನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
15 ದಿನಗಳಲ್ಲಿ ಎರಡು ಬಾರಿ ಟರ್ಮಿನಲ್ ಮ್ಯಾನೇಜರ್ಗೆ ಕರೆ ಮಾಡಿದ ಆರೋಪಿ ಆದಿತ್ಯ, ಬಾಂಬ್ ಇದೆ ಎಂದಿದ್ದ. ಬಳಿಕ ವಾಹನ ನಿಲುಗಡೆ ಸ್ಥಳದಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಹಾಕಿದ್ದ. ತದನಂತರ ವಿಮಾನ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್ ಹೆಚ್ಚು ಮಾಡಿದ್ದರು. ಆರೋಪಿ ಈ ಹಿಂದೆ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ ಮಾಡಿದ್ದ. ಈ ಸಂಬಂಧ ಕೆಐಎಎಲ್ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.