ಹೆಸರು ಕಾಳು: ಪ್ರತಿ ಕ್ವಿಂಟಾಲ್ಗೆ 6,975 ರೂ.ಬೆಂಬಲ ಬೆಲೆ
ಬೆಂಗಳೂರು, ಆ.30: ಕೇಂದ್ರ ಸರಕಾರವು ಆ.29 ರಂದು 23,250 ಮೆಟ್ರಿಕ್ ಟನ್ಗಳಷ್ಟು ಹೆಸರು ಕಾಳು ಖರೀದಿಗೆ ಅನುಮತಿ ನೀಡಿದ್ದು, ಆಯ್ದ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲು ಹಾಗೂ ಉತ್ಪನ್ನ ಖರೀದಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ತಿಳಿಸಿದ್ದಾರೆ.
ಹೆಸರು ಕಾಳು ಉತ್ಪನ್ನ ಮಾರುಕಟ್ಟೆಗೆ ಬರಲಾರಂಭಿಸಿರುವುದರಿಂದ ರೈತರಿಗೆ ಉತ್ತಮ ದರ ದೊರೆಯಬೇಕೆಂಬ ಉದ್ದೇಶದಿಂದ ವಿವಿಧ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಿರುವ ಹಿನ್ನೆಲೆಯಲ್ಲಿ ಹೆಸರು ಉತ್ಪನ್ನಕ್ಕೆ ಪ್ರತಿ ಕ್ವಿಂಟಾಲ್ಗೆ 6975 ರೂ.ಬೆಲೆ ನಿಗದಿಪಡಿಸಲಾಗಿದೆ.
ಕರ್ನಾಟಕ ರಾಜ್ಯದಲ್ಲಿ 2018-19ನೆ ಸಾಲಿನ ಮುಂಗಾರು ಹಂಗಾಮಿನಲ್ಲಿ 17.48 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ವಿವಿಧ ದ್ವಿದಳ ಧಾನ್ಯಗಳ ಬೆಳೆಗಳನ್ನು ಬಿತ್ತನೆ ಮಾಡುವ ಗುರಿ ಹೊಂದಲಾಗಿದ್ದು, ಇಲ್ಲಿಯವರೆಗೆ 15.49ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಬಿತ್ತನೆಯಾಗಿರುತ್ತದೆ.
ಹೆಸರು ಬೆಳೆಯನ್ನು 3.83ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಬಿತ್ತನೆ ಮಾಡುವ ಗುರಿಯನ್ನು ಹೊಂದಲಾಗಿದ್ದು, ಇಲ್ಲಿಯವರೆಗೆ 4.23ಲಕ್ಷ ಹೆಕ್ಟೇರ್ನಲ್ಲಿ ಬಿತ್ತನೆಯಾಗಿರುತ್ತದೆ (ಶೇ.110) ಈ ಬೆಳೆಯು ಪ್ರಮುಖವಾಗಿ ಬೆಳಗಾವಿ, ಬಾಗಲಕೋಟೆ, ಕಲಬುರಗಿ, ಯಾದಗಿರಿ, ಬೀದರ್, ಗದಗ, ಧಾರವಾಡ, ಕೊಪ್ಪಳ, ತುಮಕೂರು, ಚಿತ್ರದುರ್ಗ, ಚಾಮರಾಜನಗರ, ಹಾಸನ, ಚಿಕ್ಕಮಗಳೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.