ಬೆಂಗಳೂರಿನಲ್ಲಿ ಮುಂದುವರೆದ ನಾಯಿಗಳ ಅಟ್ಟಹಾಸ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ
ಸಾಂದರ್ಭಿಕ ಚಿತ್ರ
ಬೆಂಗಳೂರು, ಸೆ.6: ನಗರದಲ್ಲಿ ನಾಯಿಗಳ ಅಟ್ಟಹಾಸ ಮುಂದುವರೆದಿದ್ದು, ರಾಜಾಜಿನಗರದ 6ನೆ ಬ್ಲಾಕ್ನ ಸೇಂಟ್ ಮೀರಾಸ್ ಶಾಲೆ ಮುಂಭಾಗ 2ನೆ ತರಗತಿ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿವೆ.
ವಿದ್ಯಾರ್ಥಿಗಳಾದ ಆಕಾಶ್ ಮತ್ತು ಸಾಯಿಸಿರಿ ನಾಯಿಗಳ ದಾಳಿಗೆ ತುತ್ತಾದವರು. ಏಕಾಏಕಿ ನಾಯಿಗಳು ದಾಳಿ ನಡೆಸುತ್ತಿದ್ದಂತೆ ವಿದ್ಯಾರ್ಥಿಗಳು ಕಿರುಚಿಕೊಂಡಿದ್ದಾರೆ. ಈ ವೇಳೆ ಅಲ್ಲಿಯೆ ಇದ್ದ ಸ್ಥಳೀಯರು ನಾಯಿಗಳನ್ನು ಓಡಿಸಿ, ಮಕ್ಕಳನ್ನು ಪಾರು ಮಾಡಿದ್ದಾರೆ. ಕೂಡಲೆ ವಿದ್ಯಾರ್ಥಿಗಳನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದಷ್ಟೆ ಎಚ್ಎಎಲ್ನ ವಿಭೂತಿಪುರದಲ್ಲಿ ಬಾಲಕನೊಬ್ಬನ ಮೇಲೆ ದಾಳಿ ಮಾಡಿದ ನಾಯಿಗಳು ಗಂಭೀರವಾಗಿ ಗಾಯಗೊಳಿದ್ದವು. ಆ ಬಾಲಕನಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದ. ಈ ಘಟನೆಯಿಂದ ಎಚ್ಚೆತ್ತುಕೊಂಡಿದ್ದ ಬಿಬಿಎಂಪಿ ಸಿಬ್ಬಂದಿಗಳು, ಕೆಲ ಬೀದಿ ನಾಯಿಗಳನ್ನು ಪತ್ತೆ ಹಚ್ಚಿ, ತಮ್ಮ ವಶಕ್ಕೆ ತೆಗೆದುಕೊಂಡಿದ್ದರು. ಈ ಹಿಂದಿನ ಘಟನೆಗೆ ಸಂಬಂಧಿಸಿದಂತೆ ಜನತಾ ದರ್ಶನದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕುವುದಾಗಿ ಭರವಸೆ ನೀಡಿದ್ದರು. ಈ ಭರವಸೆಯ ನಡುವೆಯು ಇಂದು ಪುನಃ ಇಬ್ಬರು ವಿದ್ಯಾರ್ಥಿಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.