ಬೆಂಗಳೂರು: ಸಿಲಿಂಡರ್ ಸ್ಫೋಟ; ಎಸ್ಸೈ ಸೇರಿ ನಾಲ್ವರಿಗೆ ಗಾಯ
ಸಾಂದರ್ಭಿಕ ಚಿತ್ರ
ಬೆಂಗಳೂರು, ಸೆ.11: ಅಡುಗೆ ಅನಿಲ(ಸಿಲಿಂಡರ್) ಸ್ಫೋಟಗೊಂಡು ಎಸ್ಸೈ ಸೇರಿ ನಾಲ್ವರಿಗೆ ಗಾಯವಾಗಿರುವ ಘಟನೆ ಇಲ್ಲಿನ ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಎಸ್ಸೈ ಹಲಗೇಗೌಡ, ಮುಖ್ಯಪೇದೆ ಕುಮಾರ್, ಪೇದೆಗಳಾದ ಶಿವಶಂಕರ್ ಮತ್ತು ಭದ್ರತಾ ಸಿಬ್ಬಂದಿ ಶರಣಪ್ಪಎಂಬುವರಿಗೆ ಗಾಯಗಳಾಗಿದ್ದು, ಮಡಿವಾಳದ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ನಗರದ ಮಡಿವಾಳ ವ್ಯಾಪ್ತಿಯ ಬಿಎಂಟಿಸಿ ಬಸ್ ನಿಲ್ದಾಣ ಸಮೀಪದ ಮಸೀದಿ ಪಕ್ಕದಲ್ಲಿ ಪೆಟ್ಟಿಗೆ ಅಂಗಡಿಯೊಂದಿದ್ದು, ಸೋಮವಾರ ತಡರಾತ್ರಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿದ ಆಟೊ ಚಾಲಕ ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ.
ಮಡಿವಾಳ ಠಾಣೆ ಪೊಲೀಸರು ಮಾಹಿತಿ ರವಾನಿಸಿ ಸ್ಥಳಕ್ಕೆ ತೆರಳಿದ್ದಾರೆ. ಈ ವೇಳೆ ಅಂಗಡಿಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡಿದೆ. ಪರಿಣಾಮವಾಗಿ ನಾಲ್ವರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಈ ಸಂಬಂಧ ಮಡಿವಾಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.