ಮಾಸಾಂತ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಖಚಿತ: ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್
ಬೆಂಗಳೂರು, ಸೆ. 15: ಈ ತಿಂಗಳ ಅಂತ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಆಗುವುದು ಖಚಿತ ಎಂದು ಸ್ಪಷ್ಟಪಡಿಸಿರುವ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಯಾವುದೇ ಕಾರಣಕ್ಕೂ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆ ಇಲ್ಲ ಎಂದು ತಿಳಿಸಿದ್ದಾರೆ.
ಶನಿವಾರ ಇಲ್ಲಿನ ಕುಮಾರಕೃಪಾ ಅಥಿತಿ ಗೃಹದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಿರಿಯ ಮುಖಂಡರೊಂದಿಗೆ ಸಮಾಲೋಚನೆ ಬಳಿಕ ಮಾತನಾಡಿದ ಅವರು, ಬಿಜೆಪಿ ಮುಖಂಡರು ಎಲ್ಲವನ್ನು ಸೃಷ್ಟಿಸಿ, ಕಾಂಗ್ರೆಸ್ ಶಾಸಕರನ್ನು ಸೆಳೆದುಕೊಳ್ಳಲು ಹುನ್ನಾರ ನಡೆಸಿದ್ದಾರೆಂದು ದೂರಿದರು.
ಬಿಜೆಪಿ ಮುಖಂಡರು ಎಷ್ಟೇ ಷಡ್ಯಂತ್ರ ರೂಪಿಸಿದರೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಅಸ್ಥಿರಗೊಳಿಸಲು ಸಾಧ್ಯವಿಲ್ಲ. ಈಗಾಗಲೇ ನೂರು ದಿನ ಪೂರೈಸಿದ್ದು, ಐದು ವರ್ಷಗಳ ಕಾಲ ಉತ್ತಮ ಆಡಳಿತ ನೀಡಲಿದೆ. ಈ ಬಗ್ಗೆ ಯಾವುದೇ ಸಂಶಯ ಬೇಡ ಎಂದು ಭರವಸೆ ವ್ಯಕ್ತಪಡಿಸಿದರು.
ಬಿಜೆಪಿ ಅನೈತಿಕ ರಾಜಕಾರಣಕ್ಕೆ ಮುಂದಾಗಿದ್ದು, ಯಾವುದೇ ಆಮಿಷಗಳಿಗೆ ಕಾಂಗ್ರೆಸ್ ಶಾಸಕರು ಯಾವುದೇ ಸಂದರ್ಭದಲ್ಲಿಯೂ ಬಲಿಯಾಗುವುದಿಲ್ಲವೆಂಬ ನಂಬಿಕೆ ನಮಗಿದೆ ಎಂದ ಅವರು, ಲೋಕಸಭೆ ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು.