ಕೆಎಸ್ಆರ್ ಟಿಸಿ ಬಸ್ ಪ್ರಯಾಣ ದರ ಏರಿಕೆ ತಡೆಹಿಡಿಯಲು ಮುಖ್ಯಮಂತ್ರಿ ಸೂಚನೆ
ಬೆಂಗಳೂರು, ಸೆ.17: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಶೇ. 18 ರಷ್ಟು ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಅನುಮೋದನೆ ನೀಡಲಾದ ಬೆನ್ನಲ್ಲೇ ಆ ಆದೇಶ ತಡೆ ಹಿಡಿಯಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.
ಕೆಎಸ್ಸಾರ್ಟಿಸಿ ಬಸ್ ಪ್ರಯಾಣ ದರ ಏರಿಕೆಯನ್ನು ಕೂಡಲೇ ತಡೆಹಿಡಿಯುವಂತೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ್ದಾರೆ.
ಇದಕ್ಕೂ ಮುನ್ನ ಸೋಮವಾರ ಮಧ್ಯರಾತ್ರಿಯಿಂದಲೇ ಬಸ್ ಪ್ರಯಾಣ ದರ ಹೆಚ್ಚಿಸಲು ಸಾರಿಗೆ ಇಲಾಖೆ ಅನುಮೋದನೆ ನೀಡಲಾಗಿತ್ತು. ಹಲವು ದಿನಗಳಿಂದ ಪ್ರಯಾಣ ದರ ಏರಿಕೆ ಮಾಡುವ ಪ್ರಸ್ತಾವವನ್ನು ಮಂಡಿಸಲಾಗಿತ್ತು. ಅದರಂತೆ ಇಂದು ಮಧ್ಯರಾತ್ರಿಯಿಂದಲೇ ಶೇ. 18ರಷ್ಟು ಬಸ್ ಪ್ರಯಾಣ ದರ ಏರಿಕೆ ಸಂಬಂಧ ಆದೇಶ ಹೊರಡಿಸಿತ್ತು. ಆದರೆ, ಸಿಎಂ ಕುಮಾರಸ್ವಾಮಿ ಅದನ್ನು ತಡೆ ಹಿಡಿಯಲು ಸೂಚಿಸಿದ್ದಾರೆ. ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತ ಮಾಡಿ ಸೋಮವಾರ ಪ್ರತಿ ಲೀಟರ್ಗೆ 2 ರೂ.ಇಳಿಕೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೆ ನಾಲ್ಕು ಸಾರಿಗೆ ನಿಗಮಗಳು ಬಸ್ ಪ್ರಯಾಣ ದರ ಏರಿಕೆ ಮಾಡಲು ಮುಂದಾಗಿತ್ತು.