ಬೆಂಗಳೂರು: ವಿಚಾರಣೆಗಾಗಿ ಕರೆತಂದಿದ್ದ ವ್ಯಕ್ತಿ ಪೊಲೀಸ್ ಠಾಣೆ ಕಟ್ಟಡದಿಂದ ಬಿದ್ದು ಅನುಮಾನಾಸ್ಪದ ಸಾವು
ಬೆಂಗಳೂರು, ಸೆ.20: ಮನೆಗಳ್ಳತನ ಪ್ರಕರಣ ಸಂಬಂಧ ವಿಚಾರಣೆಗಾಗಿ ಕರೆತಂದಿದ್ದ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯ ಕಟ್ಟಡದ ಎರಡನೇ ಮಹಡಿಯಿಂದ ಬಿದ್ದು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಇಲ್ಲಿನ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಂಜು ಯಾನೆ ಸತೀಶ್(35) ಎಂಬಾತ ಮೃತಪಟ್ಟಿರುವ ದುರ್ದೈವಿ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಗಳ್ಳತನ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪ ಹಿನ್ನೆಲೆ ಗುರುವಾರ ಅಮೃತಹಳ್ಳಿ ಪೊಲೀಸರು, ಠಾಣೆಗೆ ಕರೆತಂದು, ಕಟ್ಟಡದ ಎರಡನೇ ಮಹಡಿಯಲ್ಲಿ ವಿಚಾರಣೆಗೊಳಪಡಿಸಿದ್ದರು. ಆದರೆ, ಸತೀಶ್, ಪೊಲೀಸರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕಟ್ಟಡದಿಂದ ಜಿಗಿದ ಎನ್ನಲಾಗಿದೆ.
ಜಿಗಿತದ ರಭಸಕ್ಕೆ ಆತನ ತಲೆ ಮತ್ತು ಮುಖಕ್ಕೆ ಗಂಭೀರ ಗಾಯವಾದ ಹಿನ್ನೆಲೆ ಠಾಣಾ ಪೊಲೀಸರು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ಘಟನೆ ಸಂಬಂಧ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದು, ತನಿಖೆ ನಡೆಸುವಂತೆ ಕೋರಿದ್ದಾರೆ.
Next Story