ಬೆಂಗಳೂರು: ಸೆ. 29ರಂದು ಬೃಹತ್ ಉದ್ಯೋಗ ಮೇಳ
ಬೆಂಗಳೂರು, ಸೆ.22: ಮೊದಲ ಬಾರಿಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾಡಳಿತದ ವತಿಯಿಂದ ಸೆ.29ರಿಂದ ಎರಡು ದಿನಗಳ ಕಾಲ ಬೃಹತ್ ಉದ್ಯೋಗ ಮೇಳ ಏರ್ಪಡಿಸಲಾಗಿದೆ.
ಈ ಕುರಿತು ಶನಿವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಗರದ ಜಿಲ್ಲಾಧಿಕಾರಿ ವಿಜಯ್ ಶಂಕರ್, ಈ ಉದ್ಯೋಗ ಮೇಳ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯಲಿದ್ದು, 200 ಸಂಸ್ಥೆಗಳು ಪಾಲ್ಗೊಳ್ಳಲಿದ್ದು, ಸಾವಿರಾರು ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ ಎಂದರು.
ಎಸೆಸ್ಸೆಲ್ಸಿ ಸೇರಿದಂತೆ ಪದವಿ ಗಳಿಸಿದ ಎಲ್ಲರೂ ಈ ಮೇಳದಲ್ಲಿ ಮುಕ್ತವಾಗಿ ಪಾಲ್ಗೊಳ್ಳಬಹುದಾಗಿದೆ. ಈ ಉದ್ಯೋಗ ಮೇಳದಲ್ಲಿ ಸಿಗುವ ಪ್ರತಿಕ್ರಿಯೆ ನೋಡಿಕೊಂಡು ಮುಂದಿನ ದಿನಗಳಲ್ಲಿ ಮುಂದುವರಿಸಿಕೊಂಡು ಹೋಗಲಾಗುವುದು. ಮುಖ್ಯಮಂತ್ರಿ ನಡೆಸುವ ಜನತಾ ದರ್ಶನದಲ್ಲಿ ಅರ್ಜಿ ಸಲ್ಲಿಸಿರುವ 3 ಸಾವಿರ ಅಭ್ಯರ್ಥಿಗಳು ಮತ್ತು ಕೌಶಲ್ಯಭಿವೃದ್ಧಿ ಅಡಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಮೊದಲ ಅವಕಾಶವಿರುತ್ತದೆ ಎಂದು ಮಾಹಿತಿ ನೀಡಿದರು.
ಕಂದಾಯ ಸಚಿವರು ಉದ್ಯೋಗ ಮೇಳದ ನೇತೃತ್ವ ವಹಿಸಲಿದ್ದು, ಈಗಾಗಲೇ ವಿವಿಧ ಇಲಾಖೆಗಳ ಜತೆ ಸಭೆ ನಡೆಸಲಾಗಿದೆ. ಅಧಿಕಾರಿಗಳೊಂದಿಗೆ ಚರ್ಚೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಭದ್ರತೆ, ತಿಂಡಿ-ಊಟದ ವ್ಯವಸ್ಥೆ ಮಾಡಲಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸುವರು ಎಂದು ತಿಳಿಸಿದರು.