ಅಶೋಕ್ ರನ್ನು ದೂರುವುದರಲ್ಲಿ ಅರ್ಥವಿಲ್ಲ: ಬಿಎಸ್ವೈ
ಬೆಂಗಳೂರು, ಸೆ. 30: ‘ತಂಡಸ್ಫೂರ್ತಿ ಇಲ್ಲದವರು ಗೆಲುವು ಸಾಧಿಸುವುದು ಅಸಾಧ್ಯ’ ಎಂದು ಬಿಜೆಪಿ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಹಿನ್ನೆಲೆಯಲ್ಲಿ ಟ್ವಿಟ್ಟರ್ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.
ಈ ಮಧ್ಯೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಮಾಜಿ ಡಿಸಿಎಂ ಆರ್.ಅಶೋಕ್ ವಿರುದ್ಧ ಅನಗತ್ಯ ಟೀಕೆ ಬೇಡ. ಪಕ್ಷಕ್ಕೆ ಹಿನ್ನೆಡೆಯಾಗಿದೆ ಎಂದು ಅಶೋಕ್ ಅವರನ್ನು ದೂರುವುದು ಸರಿಯಲ್ಲ ಎಂದು ಆಕ್ಷೇಪಿಸಿದಲ್ಲದೆ, ಅಶೋಕ್ ಪರ ನಿಂತಿದ್ದಾರೆ.
ಅಶೋಕ್ ಬಿಬಿಎಂಪಿಯಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಉತ್ತಮ ಪ್ರಯತ್ನ ಮಾಡಿದ್ದಾರೆ. ಅವರ ಪ್ರಾಮಾಣಿಕ ಪ್ರಯತ್ನಕ್ಕೆ ನಾನು ಅಭಿನಂದಿಸುತ್ತೇನೆ. ಅಶೋಕ್ ಅವರು ವೈಯಕ್ತಿಕವಾಗಿ ಯಾವುದೇ ತೀರ್ಮಾನ ತೆಗೆದುಕೊಂಡಿರಲಿಲ್ಲ. ಕೊನೆವರೆಗೂ ಅಭ್ಯರ್ಥಿ ಹಾಕುವುದು ಬೇಡ ಎಂದು ತೀರ್ಮಾನಿಸಿದ್ದೆವು. ಗೆಲುವಿನ ಸಾಧ್ಯತೆ ಇದೆ ಎಂಬ ಹಿನ್ನೆಲೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೆವು. ಮೇಯರ್ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಹಾಗೆಂದು ಅವರನ್ನು ಅಶೋಕ್ ಅವರನ್ನು ದೂರುವುದು ಸರಿಯಲ್ಲ ಎಂದು ಯಡಿಯೂರಪ್ಪ ಇಂದಿಲ್ಲಿ ಪ್ರತಿಕ್ರಿಯೆ ನೀಡಿದರು.