ಗ್ರಾಪಂ ಅಧ್ಯಕ್ಷರ ಹತ್ಯೆ ಪ್ರಕರಣ: 6 ಆರೋಪಿಗಳಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆ ಎತ್ತಿ ಹಿಡಿದ ಹೈಕೋರ್ಟ್
ಬೆಂಗಳೂರು, ಅ.1: ದೊಡ್ಡಕಲ್ಲಸಂದ್ರ ಗ್ರಾಪಂ ಅಧ್ಯಕ್ಷ ಮುನಿಸ್ವಾಮಯ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಈ ಸಂಬಂಧ ಆರೋಪಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ರವಿ ಮಳಿಮಠ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ಆದೇಶ ನೀಡಿದೆ. ವಿಚಾರಣಾ ನ್ಯಾಯಾಲಯದ ಆದೇಶ ರದ್ದುಕೋರಿ ಆರೋಪಿಗಳಾದ ಶ್ರೀನಿವಾಸ್, ತಿಮ್ಮರಾಯಪ್ಪ, ಬಿ.ಟಿ.ರಿಷಿಕುಮಾರ್, ಹರಿಪ್ರಸಾದ್, ಮೊಹಮದ್ ಪೀರ್ ಮತ್ತು ಅರುಣ್ಕುಮಾರ್ ಮೇಲ್ಮನವಿ ಸಲ್ಲಿಸಿದ್ದರು. ಈ ಎಲ್ಲ ಆರೋಪಿಗಳಿಗೂ ನ್ಯಾಯಪೀಠ ಶಿಕ್ಷೆಯನ್ನು ಕಾಯಂಗೊಳಿಸಿದೆ.
ಏನು ಪ್ರಕರಣ: ಮುನಿಸ್ವಾಮಯ್ಯ(37) ಅವರನ್ನು 2006ರ ಅಕ್ಟೋಬರ್ 8ರಂದು ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಹತ್ಯೆ ಮಾಡಲಾಗಿತ್ತು. ಅಲ್ಲದೆ, ಚುನಾವಣೆಯ ಪ್ರಚಾರಕ್ಕೆ ತೆರಳುವಾಗ ಆರೋಪಿಗಳು ಮುನಿಸ್ವಾಮಯ್ಯ ಅವರ ಕಾರು ಅಡ್ಡಗಟ್ಟಿ ಕೊಲೆ ಮಾಡಿದ್ದರು. ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು. ರಾಜಕೀಯದಲ್ಲಿ ಗುರುತಿಸಿಕೊಂಡಿದ್ದ ಮುನಿಸ್ವಾಮಯ್ಯ ದೊಡ್ದಕಲ್ಲಸಂದ್ರ ಗ್ರಾಪಂ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.