ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು: ಹೈಕೋರ್ಟ್ಗೆ ರಾಜ್ಯ ಸರಕಾರ ಹೇಳಿಕೆ
ಡ್ರೀಮ್ಸ್ ಲಿಮಿಟೆಡ್ ಕಂಪೆನಿ ಹೆಸರಲ್ಲಿ ವಂಚನೆ ಪ್ರಕರಣ
ಬೆಂಗಳೂರು, ಅ.4: ಡ್ರೀಮ್ಸ್ ಜಿ.ಕೆ.ಇನ್ಫ್ರಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪೆನಿ ಹೆಸರಿನಲ್ಲಿ ಸಾವಿರಾರು ಜನರಿಗೆ ಕೋಟ್ಯಂತರ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ರಾಜ್ಯ ಸರಕಾರ ಹೈಕೋರ್ಟ್ಗೆ ತಿಳಿಸಿದೆ.
ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ನಿರ್ದೇಶಿಸಬೇಕು ಎಂದು ಕೋರಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಲೇವಾರಿ ಮಾಡಿದೆ. ವಿಚಾರಣೆ ವೇಳೆ ರಾಜ್ಯ ಸರಕಾರದ ಪರ ವಕೀಲ ಡಿ.ನಾಗರಾಜ್ ಜ್ಞಾಪನಾ ಪತ್ರ ಸಲ್ಲಿಸಿ, ಈಗಾಗಲೇ ಸಿಐಡಿ ಸಮಗ್ರ ತನಿಖೆ ನಡೆಸಿದೆ. ಆರೋಪಿಗಳ ಆಸ್ತಿ ಜಪ್ತಿಗೆ ಕಾನೂನು ಕ್ರಮ ಜರುಗಿಸಿದೆ ಎಂದು ತಿಳಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿ ವಿಲೇವಾರಿ ಮಾಡಿದೆ.
ಪ್ರಕರಣವೇನು: ಡೀಮ್ಸ್ ಜಿ.ಕೆ.ಇನ್ಫ್ರಾ ಇಂಡಿಯಾ ಪ್ರವೈಟ್ ಲಿಮಿಟೆಡ್ ಹೆಸರಿನಲ್ಲಿ ಸಚಿನ್ ನಾಯಕ್ ಮತ್ತು ದಿಶಾ ಚೌಧರಿ ಮನೆಗಳನ್ನು ನಿರ್ಮಿಸಿಕೊಡುವುದಾಗಿ ಸಾರ್ವಜನಿಕರಿಂದ ಕೋಟ್ಯಂತರ ಮೊತ್ತವನ್ನು ತಮ್ಮ ಕಂಪೆನಿಗೆ ಹೂಡಿಕೆ ಮಾಡಿಸಿಕೊಂಡು ಮೋಸ ಎಸಗಿದ್ದಾರೆ ಎಂಬುದು ಅರ್ಜಿದಾರರ ಆರೋಪ.