‘ದಸರಾ’ ಉತ್ಸವದಲ್ಲಿ ಪಾಲ್ಗೊಳ್ಳುವೆ: ಉಪಮುಖ್ಯಮಂತ್ರಿ ಪರಮೇಶ್ವರ್ ಸ್ಪಷ್ಟಣೆ
"ನಾಡಹಬ್ಬದ ವಿಚಾರದಲ್ಲಿ ಯಾರೂ ರಾಜಕೀಯ ಮಾಡುವುದಿಲ್ಲ"
ಬೆಂಗಳೂರು, ಅ. 10: ನಾಡಹಬ್ಬ ಮೈಸೂರು ದಸರಾ ಉತ್ಸವ ಉದ್ಘಾಟನೆ ವಿಚಾರದಲ್ಲಿ ಯಾರೂ ರಾಜಕೀಯ ಮಾಡುವುದಿಲ್ಲ. ಅ.14, 18 ಮತ್ತು 19ರಂದು ಮೂರು ದಿನ ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ, ಸುಧಾಮೂರ್ತಿ ದಸರಾ ಉತ್ಸವಕ್ಕೆ ಚಾಲನೆ ನೀಡಿದ್ದಾರೆ. ಈ ಭಾಗದ ಎರಡೂ ಕ್ಷೇತ್ರದ ಶಾಸಕರು, ಸಚಿವರು ಉತ್ಸವಕ್ಕೆ ಹೋಗಬೇಕು. ಕೆಲವರು ಹೋಗಿಲ್ಲವೆಂಬ ಮಾಹಿತಿ ಇದೆ. ಈ ಬಗ್ಗೆ ಅವರೊಂದಿಗೆ ಮಾತನಾಡುತ್ತೇನೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದರು.
ನಾಡಹಬ್ಬ ದಸರಾ ಉತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಮೂರು ದಿನ ದಸರಾ ಉತ್ಸವದಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಮೊದಲ ದಿನ ಹೋಗಿಲ್ಲ ಎಂದು ಸ್ಪಷ್ಟಣೆ ನೀಡಿದ ಅವರು, ಉತ್ಸವಕ್ಕೆ ಚಾಲನೆ ನೀಡಿದ ಸುಧಾಮೂರ್ತಿಯವರು ಕೊಡಗು ಮರುನಿರ್ಮಾಣಕ್ಕೆ 25 ಕೋಟಿ ರೂ. ನೆರವು ಘೋಷಿಸಿರುವುದು ಶ್ಲಾಘನೀಯ ಎಂದರು.
ಸಂಪುಟ ವಿಸ್ತರಣೆ ಮಾಡುವುದರಲ್ಲಿ ಅನುಮಾನವಿಲ್ಲ. ಉಪಚುನಾವಣೆ ಎದುರಾಗಿರುವ ಕಾರಣ ಸದ್ಯಕ್ಕೆ ಇತ್ತ ಗಮನ ಹರಿಸಲಾಗಿದೆ. ಉಪ ಚುನಾವಣೆ ಹಾಗೂ ಲೋಕಸಭೆ ಚುನಾವಣೆ ಸಂಬಂಧ ವೇಣುಗೋಪಾಲ್ ಅವರ ನೇತೃತ್ವದಲ್ಲಿ ಎಲ್ಲ ನಾಯಕರೊಂದಿಗೆ ಚರ್ಚೆ ಮಾಡಲಾಗಿದೆ. ಉಪಚುನಾವಣೆಗೆ ಅಭ್ಯರ್ಥಿಗಳ ಸಮಸ್ಯೆ ಇಲ್ಲ. ಲೋಕಸಭೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚೆ ನಡೆಯುತ್ತಿದೆ ಎಂದ ಅವರು, ಐಟಿ ದಾಳಿ ಸಂಬಂಧ ಮಾಹಿತಿ ಕೋರಿದ್ದು, ಈ ಬಗ್ಗೆ ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
‘ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರವನ್ನು ಅಸ್ತಿತಗೊಳಿಸುವ ಪ್ರಯತ್ನವನ್ನು ಬಿಜೆಪಿ ನಿತ್ಯ ಮಾಡುತ್ತಿದೆ. ನಮ್ಮ ಶಾಸಕರನ್ನು ಅಷ್ಟು ಸುಲಭವಾಗಿ ಸೆಳೆದುಕೊಳ್ಳಲು ಸಾಧ್ಯವಿಲ್ಲ. ಅವರ ಶಾಸಕ ಸ್ಥಾನ ಅಸ್ತಿರಗೊಳ್ಳುವ ಭಯ ಇದ್ದೇ ಇರುತ್ತದೆ’
-ಡಾ.ಜಿ.ಪರಮೇಶ್ವರ್, ಉಪ ಮುಖ್ಯಮಂತ್ರಿ