ಇಡಿ-ಐಟಿ ಮೂಲಕ ಸಚಿವ ಡಿಕೆಶಿಗೆ ಮೋದಿ, ಅಮಿತ್ ಶಾ ಕಿರುಕುಳ: ದಿನೇಶ್ ಗುಂಡೂರಾವ್
ಬೆಂಗಳೂರು, ನ.16: ಜಾರಿ ನಿರ್ದೇಶನಾಲಯ(ಇಡಿ) ಹಾಗೂ ಆದಾಯ ತೆರಿಗೆ(ಐಟಿ) ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕಳೆದ ಒಂದು ವರ್ಷದಿಂದ ಸಚಿವ ಡಿ.ಕೆ.ಶಿವಕುಮಾರ್ಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಿ ನಿರ್ದೇಶನಾಲಯದಿಂದ ಡಿ.ಕೆ.ಶಿವಕುಮಾರ್ಗೆ ಮೂರನೆ ಬಾರಿ ನೋಟಿಸ್ ಜಾರಿ ಮಾಡಿರುವ ವಿಚಾರದ ಕುರಿತು ಈ ಮೇಲಿನಂತೆ ಪ್ರತಿಕ್ರಿಯಿಸಿದರು. ಉದ್ದೇಶಪೂರ್ವಕವಾಗಿ ನಡೆಸುತ್ತಿರುವ ಸಂಚು ಇದು. ಈ ಹಿಂದೆಯೂ ಆದಾಯ ತೆರಿಗೆ ಇಲಾಖೆಯವರು ದಾಳಿ ಮಾಡಿ ಶಿವಕುಮಾರ್ ಅವರನ್ನು ಮೂರು ದಿನ ಮನೆಯಲ್ಲಿಯೆ ಬಂಧಿಯಾಗಿಟ್ಟಿದ್ದರು. ಕಳೆದ ಒಂದು ವರ್ಷದಿಂದ ಇದೇ ರೀತಿಯಲ್ಲಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ದೂರಿದರು.
ಮಾಜಿ ಸಚಿವ ಜನಾರ್ದನ ರೆಡ್ಡಿ ಹಾಗೂ ಶಿವಕುಮಾರ್ ಅವರದ್ದು ಪ್ರತ್ಯೇಕ ಪ್ರಕರಣಗಳು. ಜನಾರ್ದನ ರೆಡ್ಡಿ ಈ ಹಿಂದೆ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಗೆ ಇದ್ದವರು. ಈಗ ಮತ್ತೆ ಯಾವುದೋ ತಪ್ಪು ಮಾಡಿ ಸಿಕ್ಕಿಬಿದ್ದಿದ್ದಾರೆ. ಆದರೆ, ಶಿವಕುಮಾರ್ ಅಂತಹ ಯಾವ ತಪ್ಪುಗಳನ್ನು ಮಾಡಿಲ್ಲ ಎಂದು ಅವರು ಹೇಳಿದರು.
ಕಾನೂನು ಎಲ್ಲರಿಗೂ ಒಂದೇ. ಕಾನೂನಿಗಿಂತ ದೊಡ್ಡವರು ಬೇರೆ ಯಾರೂ ಇಲ್ಲ. ಶಿವಕುಮಾರ್ ತಪ್ಪು ಮಾಡಿದ್ದರೆ ಅವರನ್ನು ಬಂಧಿಸಿ, ಕ್ರಮ ಕೈಗೊಳ್ಳಲಿ. ಅದನ್ನು ಬಿಟ್ಟು ಈ ರೀತಿ ಮಾನಸಿಕವಾಗಿ ಕಿರುಕುಳ ನೀಡುವುದು ಸರಿಯಲ್ಲ. ಬಿಜೆಪಿಯವರು ಅವರಿಗೆ ಕಿರುಕುಳ ನೀಡಿದ್ದಷ್ಟು ಅವರು ಮತ್ತಷ್ಟು ಎತ್ತರಕ್ಕೆ ಬೆಳೆಯುತ್ತಿರುತ್ತಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಬಿಜೆಪಿ ಶಾಸಕ ಬಿ.ಶ್ರೀರಾಮುಲು ಕಾಂಗ್ರೆಸ್ ಪಕ್ಷದಲ್ಲಿದ್ದವರು ಎಂದು ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶ್ರೀರಾಮುಲು ಮೊದಲು ಕಾಂಗ್ರೆಸ್ ಪಕ್ಷದಲ್ಲೆ ಇದ್ದವರು. ಹಲವು ಚುನಾವಣೆಗಳಲ್ಲಿ ಸ್ಥಳೀಯವಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ ಎಂದರು.
ಕಾಂಗ್ರೆಸ್ನಲ್ಲಿದ್ದವರು ಬೇರೆ ಪಕ್ಷಗಳಿಗೆ ಹೋಗಿದ್ದಾರೆ. ಅದೇ ರೀತಿ ಬೇರೆ ಪಕ್ಷದಲ್ಲಿದ್ದವರೂ ಕಾಂಗ್ರೆಸ್ ಪಕ್ಷಕ್ಕೂ ಬಂದಿದ್ದಾರೆ. ರಾಜಕಾರಣದಲ್ಲಿ ಇವೆಲ್ಲ ಸಾಮಾನ್ಯ ಸಂಗತಿ. ಶ್ರೀರಾಮುಲು ಅವರನ್ನು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸುವ ಸಂಬಂಧ ಪಕ್ಷದ ವೇದಿಕೆಯಲ್ಲಿ ಯಾವುದೇ ಚರ್ಚೆಗಳು ಆಗಿಲ್ಲ. ಆದರೆ, ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಉಪ ಚುನಾವಣೆಯಲ್ಲಿ ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿ ವಿರುದ್ಧ ನಾವು ಮತ ಕೇಳಿದೆವು. ಜನ ನಮ್ಮನ್ನು ನಂಬಿ ಮತ ಕೊಟ್ಟಿದ್ದಾರೆ. ಅವರ ಋಣ ತೀರಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.