ಗೌರಿ ಲಂಕೇಶ್ ಹತ್ಯೆ ಪ್ರಕರಣ: 4 ಸಾವಿರ ಪುಟಗಳ ಚಾರ್ಜ್ಶೀಟ್ ಸಲ್ಲಿಕೆಗೆ ಸಿದ್ಧತೆ
ಬೆಂಗಳೂರು, ನ.20: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆಗೈದಿದ್ದ ಪ್ರಕರಣ ಸಂಬಂಧ ತನಿಖೆಯು ಬಹುತೇಕ ಪೂರ್ಣಗೊಂಡಿದೆ ಎನ್ನಲಾಗಿದ್ದು, ಶೀಘ್ರದಲ್ಲಿಯೇ 4 ಸಾವಿರ ಪುಟಗಳ ಚಾರ್ಜ್ಶೀಟ್ ಸಲ್ಲಿಸಲು ಸಿಟ್(ಎಸ್ಐಟಿ) ಸಿದ್ಧತೆ ನಡೆಸಿದೆ ಎನ್ನಲಾಗಿದೆ.
14 ತಿಂಗಳಿನಿಂದ ಸಿಟ್ ತನಿಖಾಧಿಕಾರಿಗಳು ನಡೆಸುತ್ತಿರುವ ಕಾರ್ಯಾಚರಣೆ ಕೊನೆಗೊಳ್ಳುವ ಸಾಧ್ಯತೆಯಿದೆ. ಈ ಪ್ರಕರಣ ಸಂಬಂಧ ಕಳೆದ ಮೇ ತಿಂಗಳಲ್ಲಿ 650 ಪುಟಗಳ ಮೊದಲ ದೋಷಾರೋಪ ಪಟ್ಟಿಯನ್ನು ಸಿಟ್ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಇದೀಗ 4 ಸಾವಿರ ಪುಟಗಳ ಚಾರ್ಜ್ಶೀಟ್ನಲ್ಲಿ ಯಾವ ಆರೋಪಿ ಏನು ಕೃತ್ಯ ಮಾಡಿದ್ದಾನೆ ಎನ್ನುವುದರ ಬಗ್ಗೆ ಸಾಕ್ಷಿ ಇರಲಿದೆ ಎಂದು ಮೂಲಗಳು ತಿಳಿಸಿವೆ.
ವೈಚಾರಿಕ, ಸೈದ್ದಾಂತಿಕ ಕಾರಣಗಳಿಂದಲೇ ಗೌರಿ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂಬುದನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಗೌರಿ ಹತ್ಯೆಗೆ ಸಂಚು ರೂಪಿಸಿದ್ದು ಆರೋಪಿ ಅಮೋಲ್ ಕಾಳೆ ಆದರೆ, ಗೌರಿ ಮೇಲೆ ಗುಂಡು ಹಾರಿಸಿದ್ದಾನೆ ಎನ್ನಲಾದ ಪರಶುರಾಮ್ ವಾಗ್ಮೋರೆ ಸೇರಿ ಒಟ್ಟು 17 ಜನ ಆರೋಪಿಗಳ ವಿವರ ಇದರಲ್ಲಿ ಉಲ್ಲೇಖವಾಗಲಿದೆ ಎಂದು ಹೇಳಲಾಗುತ್ತಿದೆ.