ಕಾಂಗ್ರೆಸ್ ಗೆಲುವಿಗೆ ಕಾರ್ಯಕರ್ತರ ಶ್ರಮ ಮುಖ್ಯ: ದಿನೇಶ್ ಗುಂಡೂರಾವ್
ಬೆಂಗಳೂರು, ನ.21: ಮುಂದಿನ ಲೋಕಸಾಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕೆಂದು ಕೆಪಿಸಿಸಿ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದರು.
ಬುಧವಾರ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗುವ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರನ್ನು ಆದ್ಯತೆ ಮೇರೆಗೆ ಹೆಚ್ಚಿನ ಅಧಿಕಾರವನ್ನು ಕೊಡಲಾಗುವುದು ಎಂದು ತಿಳಿಸಿದರು. ಪ್ರಧಾನಿ ನರೇಂದ್ರಮೋದಿ ಕಳೆದ ನಾಲ್ಕು ವರ್ಷದಲ್ಲಿ ಏನು ಮಾಡಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ. ಕೇವಲ ಭಾಷಣಗಳನ್ನು ಮಾಡುತ್ತಾ ದೇಶಗಳನ್ನು ಸುತ್ತುತ್ತಿದ್ದಾರೆ. ಯುವಕರು ವಿದ್ಯಾಭ್ಯಾಸಕ್ಕೆ ಸರಿಸಮಾನವಾದ ಉದ್ಯೋಗ ಕೊಡಿ ಎಂದರೆ, ಪಕೋಡ ಮಾರಿ ಎಂದು ಬಿಟ್ಟಿ ಸಲಹೆ ಕೊಡುತ್ತಾರೆ. ಇಂತಹ ಪ್ರಧಾನಿಯಿಂದ ಏನು ನಿರೀಕ್ಷಿಸಲು ಸಾಧ್ಯವೆಂದು ಅವರು ಪ್ರಶ್ನಿಸಿದರು.
ಬಿಜೆಪಿಗೆ ಸಂವಿಧಾನವನ್ನು ಬದಲಿಸುವುದು, ಕೋಮುಗಲಭೆಗೆ ಪ್ರಚೋದನೆ ನೀಡುವುದೆ ಬಹುಮುಖ್ಯವಾದ ಸಿದ್ಧಾಂತವಾಗಿದೆ. ಇಂತಹ ಜನ ವಿರೋಧಿ ಚಿಂತನೆಗಳು ಜನರಿಗೆ ತಲುಪದಂತೆ ಕಾಯುವುದು ಕಾಂಗ್ರೆಸ್ ಕಾರ್ಯಕರ್ತರ ಕರ್ತವ್ಯವೆಂದು ಅವರು ಹೇಳಿದರು.
ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರಾಗಿ ನೇಮಕವಾದ ಜೆ.ಸರವಣನ್ಗೆ ಕಾಂಗ್ರೆಸ್ ಪಕ್ಷದ ಧ್ವಜ ನೀಡಿ ಅಭಿನಂದಿಸಲಾಯಿತು. ಈ ವೇಳೆ ಮಾಜಿ ವಿಧಾನಪರಿಷತ್ ಸದಸ್ಯ ವಿ.ಆರ್.ಸುದರ್ಶನ್, ಪರಿಷತ್ ಸದಸ್ಯ ರಿಝ್ವನ್, ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶೇಖರ್ ಮತ್ತಿತರರಿದ್ದರು.