ನಿವೃತ್ತ ಡಿಜಿಪಿ ಸತ್ಯನಾರಾಯಣರಾವ್ ಲಂಚ ಪಡೆದ ಆರೋಪ: ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ
ಬೆಂಗಳೂರು, ಡಿ.7: ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾಗೆ ವಿಐಪಿ ಸೌಲಭ್ಯ ನೀಡಲು 2 ಕೋಟಿ ರೂ.ಲಂಚ ಪಡೆದ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಬಂಧೀಖಾನೆ ಇಲಾಖೆಯ ನಿವೃತ್ತ ಡಿಜಿಪಿ ಸತ್ಯನಾರಾಯಣರಾವ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಎಸಿಬಿ ಪರ ವಕೀಲರಿಗೆ ಹೈಕೋರ್ಟ್ ಆದೇಶಿಸಿದೆ.
ಪ್ರಕರಣ ರದ್ದು ಕೋರಿ ಸತ್ಯನಾರಾಯಣರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ನ್ಯಾಯಪೀಠ, ಈ ಆದೇಶ ನೀಡಿದೆ. ಐಪಿಎಸ್ ಅಧಿಕಾರಿ ಡಿ.ರೂಪಾ, ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾಗೆ ವಿಐಪಿ ಸೌಲಭ್ಯ ನೀಡಲು 2 ಕೋಟಿ ರೂ.ಲಂಚ ಪಡೆದಿದ್ದಾರೆ ಎಂದು ಸತ್ಯನಾರಾಯಣರಾವ್ ವಿರುದ್ಧ ಎಸಿಬಿಗೆ ದೂರು ನೀಡಿದ್ದರು. ಅಲ್ಲದೆ, ಎಸಿಬಿ ಪೊಲೀಸರೂ ಲಂಚ ಪ್ರಕರಣ ಸಂಬಂಧ ತನಿಖೆ ಮುಂದುವರೆಸಿದ್ದರು. ಹೀಗಾಗಿ, ಶುಕ್ರವಾರ ನ್ಯಾಯಪೀಠವು ಸತ್ಯನಾರಾಯಣರಾವ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಆದೇಶಿಸಿ, ಮಧ್ಯಂತರ ಆದೇಶವನ್ನು ಮುಂದುವರೆಸಲು ಸೂಚಿಸಿತು.
ಪ್ರಕರಣವೇನು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಎಫ್ಐಆರ್ ರದ್ದು ಕೋರಿ ನಿವೃತ್ತ ಡಿಜಿಪಿ ಸತ್ಯನಾರಾಯಣ್ ರಾವ್ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ಸರಕಾರ ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ವರದಿ ಆಧರಿಸಿ ತನಿಖೆ ನಡೆಸುವಂತೆ ಎಸಿಬಿಗೆ ಆದೇಶಿಸಿತ್ತು. ಪ್ರಕರಣ ದಾಖಲಿಸಿಕೊಂಡು ಎಸಿಬಿ ತನಿಖೆ ಮುಂದುವರೆಸಿತ್ತು. ಇದೀಗ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.