ಕಣ್ಣಿಗೆ ಕಣ್ಣಿಟ್ಟು ಸುಳ್ಳು ಹೇಳುವ ಪ್ರಧಾನಿ ಮೋದಿಯನ್ನು ಜನತೆ ತಿರಸ್ಕರಿಸಿದ್ದಾರೆ: ದಿನೇಶ್ ಗುಂಡೂರಾವ್
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟ
ಬೆಳಗಾವಿ, ಡಿ.11: ನರೇಂದ್ರ ಮೋದಿ ಕಣ್ಣಿಗೆ ಕಣ್ಣಿಟ್ಟು ಸುಳ್ಳು ಹೇಳುವ ಪ್ರಧಾನಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದರು.
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಮಂಗಳವಾರ ಸುವರ್ಣಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜನರು ಭಾಷಣ, ಸುಳ್ಳು ಅಶ್ವಾಸನೆಗಳನ್ನು ಕೇಳಲು ಇಷ್ಟಪಡುವುದಿಲ್ಲ. ಅಲ್ಲದೆ, ಈ ಚುನಾವಣೆಯಲ್ಲಿ ಕಣ್ಣಿಗೆ ಕಣ್ಣಿಟ್ಟು ಸುಳ್ಳು ಹೇಳುವ ಪ್ರಧಾನಿ ಮೋದಿಯನ್ನು ತಿರಸ್ಕಾರ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ದೇಶದ ಜನರು ವಿಶ್ವಾಸ ಇಟ್ಟುಕೊಂಡಿಲ್ಲ ಎಂದ ಅವರು, ಪ್ರಧಾನಿ ಮೋದಿ ಶ್ರೀಮಂತರ ಪರ ಕೆಲಸ ಮಾಡಿದ್ದಾರೆ. ಹೀಗಾಗಿಯೇ, ಬಿಜೆಪಿ ಆಡಳಿತ ಇದ್ದ ರಾಜ್ಯಗಳಲ್ಲೂ ಸೋಲು ಕಂಡಿದೆ ಎಂದು ಅವರು ಆರೋಪಿಸಿದರು.
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಳಿಕ ಲೋಕಸಭಾ ಟಿಕೆಟ್ ಹಂಚಿಕೆ ಮಾಡಲಾಗುವುದು ಎಂದ ಅವರು, ದತ್ತ ಜಯಂತಿ ದಿನದಂದೇ ಸಂಪುಟ ವಿಸ್ತರಣೆ ಆಗಲಿದ್ದು, ಎರಡೂ ಪಕ್ಷಗಳ ಮುಖಂಡರ ಅಭಿಪ್ರಾಯ, ಸಲಹೆಗಳನ್ನು ಪಡೆದು ಸಂಪುಟ ವಿಸ್ತರಣೆಗೆ ಮುಂದಾಗಿದ್ದೇವೆ ಎಂದು ದಿನೇಶ್ ಗುಂಡೂರಾವ್ ನುಡಿದರು.