ಗುಂಡು ಹಾರಿಸಿ ರೌಡಿಶೀಟರ್ ಬಂಧನ
ಬೆಂಗಳೂರು, ಡಿ.18: ಕೊಲೆ, ಡಕಾಯಿತಿ ಸೇರಿದಂತೆ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ರೌಡಿಯೋರ್ವನ ಕಾಲಿಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಬ್ಯಾಟರಾಯನಪುರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ರೌಡಿಶೀಟರ್ ವಾಸೀಂ ಯಾನೆ ಬುಡ್ಕಾ ವಾಸೀಂ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಇಲ್ಲಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ರೌಡಿ ವಾಸೀಂ ತಲೆಮರೆಸಿಕೊಂಡಿದ್ದ ಎಂಬ ಮಾಹಿತಿ ಸಂಗ್ರಹಿಸಿ ಎಸ್ಸೈ ವಿರೇಂದ್ರ ಪ್ರಸಾದ್ ನೇತೃತ್ವದ ತಂಡವು ದಾಳಿ ನಡೆಸಿದಾಗ, ಆರೋಪಿ ವಾಸೀಂ, ಪೊಲೀಸ್ ಪೇದೆಯೊಬ್ಬರ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಿದರೂ ಆತ ಹಲ್ಲೆ ನಡೆಸಲು ಮುಂದಾಗಿದ್ದ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ವಾಸೀಂ ಕಾಲಿಗೆ ಗುಂಡು ಹೊಡೆದು ಸೆರೆ ಹಿಡಿದಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚಿಗೆ ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯಲ್ಲಿ ಝಬೀವುಲ್ಲಾ ಎಂಬುವರ ಕೊಲೆ ಪ್ರಕರಣದಲ್ಲಿ ಆರೋಪಿ ವಾಸೀಂ ಪ್ರಮುಖ ಆರೋಪಿ ಆಗಿದ್ದ. ಜೊತೆಗೆ ಚಂದ್ರಲೇಔಟ್ ಹಾಗೂ ಬ್ಯಾಟರಾಯನಪುರ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕೊಲೆ, ಡಕಾಯಿತಿ ಮೊಕದ್ದಮೆ ದಾಖಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.