ಬೆಂಗಳೂರು: ವ್ಯಕ್ತಿಗೆ ಚಾಕುವಿನಿಂದ ಇರಿದು ಪರಾರಿ
ಬೆಂಗಳೂರು, ಡಿ.28: ಅಪರಿಚಿತರು ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಇಲ್ಲಿನ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.
ರಾಜೇಶ್ ಎಂಬುವರು ಇರಿತಕ್ಕೊಳಗಾದವರು ಎಂದು ತಿಳಿದುಬಂದಿದೆ.
ರಾಜೇಶ್ ತನ್ನ ಸ್ನೇಹಿತರ ಜೊತೆ ಬೇಕರಿ ಮುಂದೆ ನಿಂತಿದ್ದರು. ಆ ವೇಳೆ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಏಕಾಏಕಿ ಚಾಕುವಿನಿಂದ ರಾಜೇಶ್ ಹೊಟ್ಟೆಗೆ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ತಕ್ಷಣ ಜೊತೆಯಲ್ಲಿದ್ದ ಸ್ನೇಹಿತ ರಾಘವೇಂದ್ರ ಆರೋಪಿಗಳನ್ನು ಹಿಡಿಯಲು ಪ್ರಯತ್ನಿಸಿದರು. ಈ ವೇಳೆ ರಾಘವೇಂದ್ರ ಅವರ ಮೇಲೂ ಹಲ್ಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಸದ್ಯ ಗಾಯಾಳುಗಳಿಗೆ ಇಂದಿರಾನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆ ಸಂಬಂಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
Next Story