ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡ್ವಾರು ಮೀಸಲಾತಿ ನಿಗದಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು, ಜ.10: ರಾಜ್ಯದ 26 ಜಿಲ್ಲೆಗಳ 101 ನಗರ ಸ್ಥಳೀಯ ಸಂಸ್ಥೆಗಳಿಗೆ ಕ್ಷೇತ್ರ ಪುನರ್ವಿಂಗಡಣೆಗೊಳಿಸಿ ವಾರ್ಡ್ವಾರು ಮೀಸಲಾತಿ ನಿಗದಿಗೊಳಿಸಿ ರಾಜ್ಯ ಸರಕಾರ ಹೊರಡಿಸಿದ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ತರಕಾರು ಅರ್ಜಿಗಳ ವಿಚಾರಣೆಯನ್ನು ಗುರುವಾರ ಪೂರ್ಣಗೊಳಿಸಿದ ಹೈಕೋರ್ಟ್, ಈ ಕುರಿತು ತೀರ್ಪು ಕಾಯ್ದಿರಿಸಿದೆ.
ಸರಕಾರದ ಅಧಿಸೂಚನೆ ಪ್ರಶ್ನಿಸಿ ಸುಮಾರು 25ಕ್ಕೂ ಹೆಚ್ಚು ಅರ್ಜಿಗಳ ಸಲ್ಲಿಕೆಯಾಗಿದ್ದವು. ಈ ಎಲ್ಲ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾ. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ತೀರ್ಪು ಕಾಯ್ದಿರಿಸುವುದಾಗಿ ಹೇಳಿತು. ಈ ಮಧ್ಯೆ ಜ.16ರವರೆಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸುವುದಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ಗೆ ಹೇಳಿದೆ. ಈ ಹಿಂದೆ ಜ.10ರವರೆಗೆ ವೇಳಾಪಟ್ಟಿ ಪ್ರಕಟಿಸುವುದಿಲ್ಲ ಎಂದು ಆಯೋಗ ಹೇಳಿತ್ತು. ಆದರೆ, ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ ತೀರ್ಪು ಕಾಯ್ದಿರಿಸಿದ ಹಿನ್ನೆಲೆಯಲ್ಲಿ ಜ.16ರವರೆಗೆ ವೇಳಾಪಟ್ಟಿ ಪ್ರಕಟಿಸುವುದಿಲ್ಲ ಎಂದು ಗುರುವಾರ ನ್ಯಾಯಪೀಠಕ್ಕೆ ತಿಳಿಸಿತು.
ಈ ವರ್ಷ ಮಾರ್ಚ್ನಲ್ಲಿ ಅವಧಿ ಪೂರ್ಣಗೊಳ್ಳಲಿರುವ ಆರು ಮಹಾನಗರ ಪಾಲಿಕೆಗಳು ಸೇರಿ ರಾಜ್ಯದ 26 ಜಿಲ್ಲೆಗಳ 101 ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡ್ಗಳ ಕ್ಷೇತ್ರ ಪುನರ್ವಿಂಗಡಣೆಗೊಳಿಸಿ ಹಾಗೂ ವಾರ್ಡ್ವಾರು ಮೀಸಲಾತಿ ನಿಗದಿಪಡಿಸಿ 2018ರ ಆಗಸ್ಟ್ನಲ್ಲಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿತ್ತು. ಅದನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.