ಶಾಸಕ ಬಿ.ನಾಗೇಂದ್ರ ಬೆಂಗಳೂರಿನಲ್ಲಿ ದಿಢೀರ್ ಪ್ರತ್ಯಕ್ಷ
"ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗುತ್ತೇನೆ"
ಬೆಂಗಳೂರು, ಜ. 17: ಮುಂಬೈನ ಹೊಟೇಲ್ನಲ್ಲಿ ಬೀಡುಬಿಟ್ಟಿದ್ದಾರೆಂದು ಹೇಳಲಾಗಿದ್ದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಇಂದು ಬೆಂಗಳೂರಿನಲ್ಲಿ ದಿಢೀರ್ ಪ್ರತ್ಯಕ್ಷರಾಗುವ ಮೂಲಕ ಅಚ್ಚರಿ ಮೂಡಿಸಿದರು.
ಗುರುವಾರ ನಗರದಲ್ಲಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅಕ್ರಮ ಅದಿರು ಸಾಗಾಣಿಕೆ ಪ್ರಕರಣಕ್ಕೆ ಸಂಬಂಧ ವಿಚಾರಣೆ ಹಿನ್ನೆಲೆಯಲ್ಲಿ ನಾಗೇಂದ್ರ ಕೋರ್ಟ್ಗೆ ಹಾಜರಾದರು. ಶಾಸಕ ನಾಗೇಂದ್ರ ಕಾಂಗ್ರೆಸ್ ತ್ಯಜಿಸಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಅಲ್ಲದೆ, ನಾಲ್ಕೈದು ದಿನಗಳಿಂದ ಅವರು ಯಾರೊಬ್ಬರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ.
ಸಿಎಲ್ಪಿಗೆ ಹಾಜರು: ನಾವು ಎಲ್ಲಿಯೂ ಹೋಗಿಲ್ಲ. ಎಲ್ಲರೂ ಅಲ್ಲಲ್ಲಿಯೇ ಇದ್ದೇವೆ. ಕೆಲವರು ಏನೇನೋ ಹೇಳುತ್ತಾರೆ. ಅವುಗಳನ್ನೆಲ್ಲಾ ನಂಬುವುದಕ್ಕೆ ಸಾಧ್ಯವಿಲ್ಲ ನಮ್ಮಿಂದ ಸರಕಾರಕ್ಕೆ ಯಾವುದೇ ಸಂಕಷ್ಟವಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ನಿಷ್ಠನಾಗಿದ್ದೇನೆ ಎಂದು ನಾಗೇಂದ್ರ ಸ್ಪಷ್ಟಪಡಿಸಿದರು.
ಮಾಜಿ ಸಿಎಂ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಾಳೆ(ಜ.18) ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗುತ್ತೇನೆ. ಅಕ್ರಮ ಅದಿರು ನಾಪತ್ತೆ ಪ್ರಕರಣ ಕೋರ್ಟ್ನಲ್ಲಿದ್ದು ಈ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡಲಾರೆ ಎಂದು ನಾಗೇಂದ್ರ ಹೇಳಿದರು.