ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ, ನಮಗೂ ಯಾವುದೇ ಸಂಬಂಧವಿಲ್ಲ: ಬಿ.ಎಸ್.ಯಡಿಯೂರಪ್ಪ
ಬೆಂಗಳೂರು, ಜ. 18: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ನಮಗೂ ಯಾವುದೇ ಸಂಬಂಧವಿಲ್ಲ. ಕಾಂಗ್ರೆಸ್ ಪಕ್ಷದ ಶಾಸಕರ ರಕ್ಷಣೆ ಆ ಪಕ್ಷದ ಮುಖಂಡರ ಜವಾಬ್ದಾರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಹೇಳಿದ್ದಾರೆ.
ಶುಕ್ರವಾರ ಡಾಲರ್ಸ್ ಕಾಲನಿಯಲ್ಲಿನ ತನ್ನ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಶಾಸಕರಲ್ಲಿ ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ ಎಂಬ ಮೈತ್ರಿ ಮುಖಂಡರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ನಿರಾಕರಿಸಿದರು.
ನಮ್ಮ ಪಕ್ಷದ 104 ಶಾಸಕರನ್ನು ಒಟ್ಟಿಗೆ ಇಟ್ಟುಕೊಳ್ಳುವುದು ನಮ್ಮ ಜವಾಬ್ದಾರಿ. ಲೋಕಸಭೆ ಚುನಾವಣೆಗೆ ಸಿದ್ದತೆ ಹಾಗೂ 20 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಸಂಬಂಧ ಚರ್ಚಿಸಲು ಪಕ್ಷದ ಎಲ್ಲ ಶಾಸಕರು ಹೊಸದಿಲ್ಲಿಗೆ ತೆರಳಿದ್ದು, ನಾಳೆ ನಮ್ಮ ಎಲ್ಲ ಶಾಸಕರು ಬೆಂಗಳೂರಿಗೆ ಆಗಮಿಸಲಿದ್ದಾರೆಂದು ಅವರು ಹೇಳಿದರು.
ಹರಿಯಾಣದ ಗುರುಗ್ರಾಮದ ಹೊಟೇಲ್ನಲ್ಲಿರುವ ಬಿಜೆಪಿ ಶಾಸಕರು ಬೇರೆ ರೆಸಾರ್ಟ್ ಶಿಫ್ಟ್ ಮಾಡಲಾಗಿದೆ ಎಂಬ ಸುದ್ದಿಯಲ್ಲಿ ಸತ್ಯಾಂಶವಿಲ್ಲ. ಇದು ಕೇವಲ ಊಹಾಪೋಹ. ಮೈತ್ರಿ ಸರಕಾರ ಅಸ್ಥಿರಕ್ಕೆ ನಾವು ಯಾವುದೇ ಪ್ರಯತ್ನವನ್ನೂ ನಡೆಸಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಣೆ ನೀಡಿದರು.
ಪಾಟೀಲ್ ಪುತ್ರಿಯ ವಿವಾಹದಲ್ಲಿ ಬಿಎಸ್ವೈ ಭಾಗಿ: ಹಿರೇಕೆರೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಪುತ್ರಿ ಸೃಷ್ಟಿ ಪಾಟೀಲ್ ಅವರ ವಿವಾಹ ಸಮಾರಂಭದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪಾಲ್ಗೊಂಡು, ವಧು-ವರರಿಗೆ ಶುಭ ಹಾರೈಸಿದರು.