ಆನ್ಲೈನ್ ಮೂಲಕವೇ ಪ್ರವೇಶಕ್ಕೆ ಆದ್ಯತೆ: ಸಚಿವ ಜಿ.ಟಿ.ದೇವೇಗೌಡ
ಬೆಂಗಳೂರು, ಜ. 24: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೆ ವಿದ್ಯಾರ್ಥಿಗಳ ಪ್ರವೇಶ ಮತ್ತು ಪರೀಕ್ಷಾ ಪ್ರಕ್ರಿಯೆಗಳನ್ನು ಆನ್ಲೈನ್ ಮೂಲಕ ನಡೆಸಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿವಿಗಳಿಗೆ ಪ್ರವೇಶ ಪಡೆಯಲು ಕ್ಯಾಂಪಸ್ಗಳಿಗೆ ಅಲೆಯುವುದನ್ನು ತಪ್ಪಿಸಲು ಆನ್ಲೈನ್ ಮೂಲಕ ಪ್ರವೇಶ ಪಡೆಯಲು ಕ್ರಮ ಕೈಗೊಳ್ಳಲಾಗುವುದು. ಆಯಾ ಜಿಲ್ಲಾ ಕೇಂದ್ರಗಳಲ್ಲಿ ಆನ್ಲೈನ್ ವ್ಯವಸ್ಥೆಗೆ ಅಗತ್ಯವಿರುವ ಉಪಕರಣಗಳನ್ನು ಅಳವಡಿಸಲಾಗುವುದು. ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಳ್ಳುವುದಕ್ಕೂ ಅವಕಾಶ ಕಲ್ಪಿಸಲಾಗುವುದು ಎಂದರು.
ಎಲ್ಲ ವಿವಿಗಳ ಪ್ರವೇಶಾತಿಗೆ ಏಕರೂಪ ಶುಲ್ಕ ಪದ್ಧತಿಯನ್ನು ಜಾರಿಗೆ ತರಲು ಚಿಂತನೆ ನಡೆಸಿದ್ದು, ವಿವಿ ಉಪನ್ಯಾಸಕರ ಬೋಧನ ಕೌಶಲ್ಯ ವೃದ್ಧಿಗೆ ಶಿಕ್ಷಣ ತಜ್ಞರಿಂದ ತರಬೇತಿ ಕೊಡಿಸಲು ನಿರ್ಧರಿಸಲಾಗಿದೆ. ಏಕರೂಪದ ಪಠ್ಯಕ್ರಮ ಜಾರಿ ಸಂಬಂಧ ಅಧ್ಯಯನ ನಡೆಸಿ, ವರದಿ ನೀಡಲು ತಜ್ಞರ ಸಮಿತಿ ನೇಮಕ ಮಾಡಲಾಗುವುದು. ಬಿಎ, ಬಿಕಾಂ, ಬಿಎಸ್ಸಿ ಸೇರಿದಂತೆ ವಿವಿಧ ಪದವೀಧರ ಪಠ್ಯಕ್ರಮಗಳ ಜತೆಗೆ ಕೌಶಲ್ಯ ತರಬೇತಿ ನೀಡುವುದು ಅಗತ್ಯವಿದೆ. ಈ ಬಗ್ಗೆ ತಜ್ಞರ ಸಮಿತಿಯಲ್ಲಿರುವ ಶಿಫಾರಸುಗಳನ್ನು ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದೇವೇಗೌಡ ಹೇಳಿದರು.
ಮೀಸಲಾತಿ: ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರಿಗೆ ಶೇ.50ರಷ್ಟು ಮೀಸಲಾತಿ ಕಲ್ಪಿಸುವ ಸಂಬಂಧ ಚಿಂತನೆ ನಡೆದಿದ್ದು, ಹಂತ-ಹಂತವಾಗಿ ಈ ವ್ಯವಸ್ಥೆಯನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ ಎಂದು ದೇವೇಗೌಡ ಇದೇ ವೇಳೆ ತಿಳಿಸಿದರು.
ರಾಜ್ಯದ 64 ವಿಶ್ವ ವಿದ್ಯಾಲಯಗಳಿವೆ, ಎಲ್ಲ ವಿಶ್ವ ವಿದ್ಯಾಲಯಗಳು ತಮ್ಮ ಸುತ್ತಮುತ್ತಲ ಕನಿಷ್ಠ 5 ಹಳ್ಳಿಗಳನ್ನು ದತ್ತು ತೆಗೆದುಕೊಂಡು ಅವರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಬದುಕನ್ನು ಹಸನುಗೊಳಿಸುವ ಸಂಬಂಧ ಜಾಗೃತಿ ಮೂಡಿಸಬೇಕು ಎಂಬುದನ್ನು ಕಡ್ಡಾಯಗೊಳಿಸಲಾಗುವುದು ಎಂದರು. ಮೌಲ್ಯಮಾಪನದಲ್ಲೇ ಆಗುತ್ತಿರುವ ಲೋಪದೋಷಗಳನ್ನು ಸರಿಪಡಿಸಲು ತಜ್ಞರ ಸಮಿತಿಯೊಂದನ್ನು ಫೆಬ್ರವರಿಯಲ್ಲಿ ನೇಮಕ ಮಾಡಿ ಒಂದು ತಿಂಗಳ ಅವಧಿಯಲ್ಲಿ ವರದಿ ನೀಡುವಂತೆ ಸೂಚಿಸಲಾಗುವುದು, ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿ.ಟಿ.ದೇವೇಗೌಡ ತಿಳಿಸಿದರು.
ರೈಲ್ವೆ ಇಲಾಖೆಯಲ್ಲಿನ ಹಲವು ಹುದ್ದೆಗಳಿಗೆ ಎಂಜಿನಿಯರಿಂಗ್, ಡಿಪ್ಲೊಮಾ ವಿದ್ಯಾರ್ಥಿಗಳು ಅರ್ಹರಿದ್ದಾರೆ. ಆದರೆ, ವಿದ್ಯಾರ್ಥಿಗಳು ರೈಲ್ವೆ ಪರೀಕ್ಷೆಯ ಬಗ್ಗೆ ಅಷ್ಟಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ. ಹೀಗಾಗಿ ಇಂತಹ ಪರೀಕ್ಷೆಗಳಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ ಎಂದರು.
ಉನ್ನತ ಶಿಕ್ಷಣ ಇಲಾಖೆಯಲ್ಲಿ ವರ್ಗಾವಣೆ ಸಂಬಂಧ ಮುಂದಿನ ವರ್ಷದಿಂದ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ರಾಜ್ಯದಲ್ಲಿ 12 ಸಾವಿರ ಮಂದಿ ಅತಿಥಿ ಉಪನ್ಯಾಸಕರಿದ್ದು, ಅವರಿಗೂ ಪರೀಕ್ಷೆ ನಡೆಸಿ ಅವರನ್ನು ನೇಮಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದರು.