ಮಾಜಿ ಸಿಎಂ ಸಿದ್ದರಾಮಯ್ಯ ಸಹಿ ನಕಲು ಮಾಡಿದ ಭೂಪರು!
ಬೆಂಗಳೂರು, ಜ.26: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಿಯನ್ನೇ ನಕಲಿ ಮಾಡಿರುವ ಆರೋಪದಡಿ ಇಬ್ಬರು ದುಷ್ಕರ್ಮಿಗಳನ್ನು ಇಲ್ಲಿನ ಕಬ್ಬನ್ಪಾರ್ಕ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಸಿದ್ಧಾರೂಡ ಸಂಗೊಳ್ಳಿ ಹಾಗೂ ಅಂದಿನ ಮುಖ್ಯಮಂತ್ರಿ ಕಚೇರಿಯ ಸ್ಟೆನೊಗ್ರಾಫರ್ ಗುರುನಾಥ್ ಬಂಧಿತ ಆರೋಪಿಗಳೆಂದು ತಿಳಿದುಬಂದಿದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬೆಳಗಾವಿಯ ಸಂಗೊಳ್ಳಿ ಮೂಲದ ಆರೋಪಿ ಸಿದ್ಧಾರೂಢ, ಕುರುಬ ಸಮುದಾಯದ ಭವನ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿದ್ದ. ಇದಕ್ಕಾಗಿ 200 ಕೋಟಿ ರೂ. ಹಣ ಮಂಜೂರು ಮಾಡಿರುವುದಾಗಿ ಸಿದ್ದರಾಮಯ್ಯ ಅವರ ನಕಲಿ ಸಹಿ ಮಾಡಿ ಅದನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ಕಾರ್ಯದರ್ಶಿಗೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಪತ್ರದ ಬಗ್ಗೆ ಅನುಮಾನಗೊಂಡು ಸೂಕ್ಷವಾಗಿ ಪರಿಶೀಲಿಸಿದಾಗ ಸಿದ್ದರಾಮಯ್ಯ ಅವರ ನಕಲಿ ಸಹಿ ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಹಿಂದುಳಿದ ವರ್ಗಗಳ ಉಪಕಾರ್ಯದರ್ಶಿ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಬಳಿಕ ಪ್ರಕರಣ ಕಬ್ಬನ್ ಪಾರ್ಕ್ ಪೊಲೀಸರಿಗೆ ವರ್ಗಾವಣೆಗೊಂಡಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಸಿದ್ಧಾರೂಡ ಸಂಗೊಳ್ಳಿ ಹಾಗೂ ಕೃತ್ಯಕ್ಕೆ ಸಹಕಾರ ನೀಡಿದ ಗುರುನಾಥ್ ಅನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.