ವಾಯುನೆಲೆಯಲ್ಲಿ ಬೆಂಕಿ ಅವಘಡದ ಬಗ್ಗೆ ಸಮಗ್ರ ತನಿಖೆ: ಗೃಹ ಸಚಿವ ಎಂ.ಬಿ.ಪಾಟೀಲ್
ಕಲಬುರ್ಗಿ, ಫೆ. 23: ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ವೇಳೆ ಯಲಹಂಕ ವಾಯುನೆಲೆಯ ಪಾರ್ಕಿಂಗ್ ಸ್ಥಳದಲ್ಲಿ ಸಂಭವಿಸಿದ ಬೆಂಕಿ ಅವಘಡದ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಘಟನೆಯ ಬಗ್ಗೆ ಸಮಗ್ರ ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲಾಗುವುದು. ಬಯಲು ಪ್ರದೇಶ, ಜತೆಗೆ ಒಣಹುಲ್ಲು ಇದ್ದ ಕಾರಣದಿಂದ ಈ ಅಗ್ನಿ ಅನಾಹುತ ಸಂಭವಿಸಿದೆ ಎಂದರು.
ಏರ್ ಶೋ ವೇಳೆ ಇಂತಹ ಘಟನೆ ನಡೆದಿರುವುದು ನೋವು ತಂದಿದೆ. ಜೀವರಕ್ಷಣೆಗೆ ಮೊದಲ ಆದ್ಯತೆ ನೀಡಲಾಗಿದೆ. ಅಗ್ನಿಶಾಮಕ ದಳದ ಡಿಜಿಪಿ ಎಂ.ಎನ್.ರೆಡ್ಡಿ ಅವರಿಂದ ಮಾಹಿತಿ ಪಡೆದಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆಯೂ ಸೂಚಿಸಲಾಗಿದೆ ಎಂದು ಎಂ.ಬಿ.ಪಾಟೀಲ್ ಹೇಳಿದರು.
ಸಿಟ್ ತಂಡ ರಚನೆ: ‘ಆಪರೇಷನ್ ಕಮಲ’ ಆಡಿಯೋ ಪ್ರಕರಣ ಸಂಬಂಧ ಸಿಟ್ ತನಿಖಾ ತಂಡ ರಚಿಸಿ, ಪ್ರಕರಣದ ಬಗ್ಗೆ ಈಗಾಗಲೇ ಆಡಿಯೋದಲ್ಲಿರುವುದು ತಮ್ಮದೇ ಧ್ವನಿ ಎಂದು ಬಿಎಸ್ವೈ ಹೇಳಿದ್ದು, ಸತ್ಯ ಒಪ್ಪಿಕೊಂಡಿದ್ದಾರೆ. ಹೀಗಾಗಿ ಅವರನ್ನು ಅಭಿನಂದಿಸುವೆ. ಈ ಪ್ರಕರಣದಲ್ಲಿ ಸ್ಪೀಕರ್ ಹೆಸರು ಕೇಳಿಬಂದಿದ್ದು, ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.