ಅಭ್ಯರ್ಥಿಯ ಕುಟುಂಬ ಸದಸ್ಯರ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ: ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್
ಒಬ್ಬ ಅಭ್ಯರ್ಥಿಗೆ 70 ಲಕ್ಷ ಖರ್ಚು ಮಾಡಲು ಅವಕಾಶ
ಬೆಂಗಳೂರು, ಮಾ.19: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿಚ್ಛಿಸುವ ಅಭ್ಯರ್ಥಿಗಳು ತಮ್ಮ ಹಾಗೂ ಕುಟುಂಬದ ಸದಸ್ಯರ ಆಸ್ತಿ ವಿವರ, ಕ್ರಿಮಿನಲ್ ಮೊಕದ್ದಮೆಗಳು ಹಾಗೂ ತೆರಿಗೆ ಮಾಹಿತಿಯನ್ನು ನಾಮಪತ್ರ ಸಲ್ಲಿಕೆ ವೇಳೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.
ಮಂಗಳವಾರ ನಗರದ ಬಿಬಿಎಂಪಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರಪತಿಗಳ ಆದೇಶ ಅನ್ವಯ ಮಂಗಳವಾರದಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಈ ನಿಟ್ಟಿನಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ವೇಳೆ ಎಲ್ಲವನ್ನೂ ಸಂಪೂರ್ಣವಾಗಿ ಭರ್ತಿ ಮಾಡಬೇಕು ಎಂದು ತಿಳಿಸಿದರು.
ಹಿಂದಿನ ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಯ ವಿದ್ಯಾರ್ಹತೆ, ಆಸ್ತಿ ವಿವರ, ಕ್ರಿಮಿನಲ್ ಪ್ರಕರಣಗಳನ್ನು ಅಷ್ಟೇ ತುಂಬಬೇಕಿತ್ತು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಕುಟುಂಬ ಸದಸ್ಯರ ವಿವರಗಳನ್ನೂ ಕೇಳಲಾಗಿದೆ. ಎಷ್ಟು ಆಸ್ತಿಯಿದೆ, ಎಷ್ಟು ತೆರಿಗೆ ಕಟ್ಟಲಾಗಿದೆ ಎಂಬ ಮಾಹಿತಿ ನೀಡಬೇಕು. ನಾಮಪತ್ರದಲ್ಲಿ ಎಲ್ಲ ಕಾಲಂಗಳನ್ನು ಕಡ್ಡಾಯವಾಗಿ ತುಂಬಬೇಕು. ಖಾಲಿ ಬಿಟ್ಟಿದ್ದರೆ ಅದನ್ನು ವಾಪಸ್ಸು ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಚುನಾವಣೆಯಲ್ಲಿ ಸ್ಪರ್ಧಿಸಬಯಸುವ ಎಲ್ಲ ಅಭ್ಯರ್ಥಿಗಳು ತಮ್ಮ ಮೇಲೆ ಕ್ರಿಮಿನಲ್ ಮೊಕದ್ದಮೆಗಳಿದ್ದರೆ ಅದನ್ನು ಪತ್ರಿಕೆ ಹಾಗೂ ಟಿವಿಗಳಲ್ಲಿ ಕಡ್ಡಾಯವಾಗಿ ಮೂರು ಬಾರಿ ಜಾಹೀರಾತಿನ ಮೂಲಕ ಪ್ರಚಾರ ಮಾಡಬೇಕು. ಒಬ್ಬ ಅಭ್ಯರ್ಥಿಗೆ ಒಂದು ಕ್ಷೇತ್ರಕ್ಕೆ 70 ಲಕ್ಷದಷ್ಟು ಹಣ ಖರ್ಚು ಮಾಡಲು ಅವಕಾಶವಿದ್ದು, ಅದಕ್ಕಾಗಿ ಪ್ರತ್ಯೇಕ ಬ್ಯಾಂಕ್ ಖಾತೆಯನ್ನು ತೆರೆದಿರಬೇಕು. ಅದರ ಜತೆಗೆ, ಕಾಲಕಾಲಕ್ಕೆ ಆಯೋಗಕ್ಕೆ ಮಾಹಿತಿ ಸಲ್ಲಿಸುತ್ತಿರಬೇಕು ಎಂದು ಅವರು ತಿಳಿಸಿದರು.
ನಾಮಪತ್ರ ಸಲ್ಲಿಕೆ: ಮೊದಲನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸ್ವೀಕರಿಸಲಾಗುತ್ತಿದೆ. ಬೆ.11 ರಿಂದ ಮಧ್ಯಾಹ್ನ 3 ರವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುತ್ತದೆ. ನಾಮಪತ್ರದ ಜತೆಗೆ ಪ್ರಮಾಣ ಪತ್ರ(ಫಾರಂ 26) ಸಲ್ಲಿಸಬೇಕು. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಯ ಜತೆಗೆ 5 ಜನರಿಗೆ ಒಳಗಡೆ ಪ್ರವೇಶಕ್ಕೆ ಅವಕಾಶವಿರುತ್ತದೆ.
ನಾಮಪತ್ರ ಸಲ್ಲಿಸುವ ಕೇಂದ್ರದ 100 ಮೀ. ಪ್ರದೇಶದಲ್ಲಿ ಮೂರು ವಾಹನಗಳಿಗೆ ಅವಕಾಶವಿದೆ. ಮಾ.19 ರಿಂದ ಮಾ.26 ರ ಅವಧಿಯಲ್ಲಿ 4 ನೆ ಶನಿವಾರ(ಮಾ.23) ಹಾಗೂ ರವಿವಾರಗಳಂದು ನಾಮಪತ್ರ ಸಲ್ಲಿಕೆಗೆ ಅವಕಾಶವಿರುವುದಿಲ್ಲ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ನಾಮಪತ್ರದಲ್ಲಿ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳಿಗೆ ಒಬ್ಬರು ಹಾಗೂ ಸ್ವತಂತ್ರ ಅಭ್ಯರ್ಥಿಗಳಿಗೆ 10 ಜನ ನಾಮನಿರ್ದೇಶನ ಸಹಿ ಹಾಕಿರಬೇಕು ಎಂದು ಮಾಹಿತಿ ನೀಡಿದರು.
ಅದಮ್ಯ ಚೇತನ ಟ್ರಸ್ಟ್ ವತಿಯಿಂದ ಬಿಸಿಯೂಟ ಪೂರೈಕೆ ಮಾಡುತ್ತಿದ್ದು, ಬಿಜೆಪಿ ಸಂಭಾವ್ಯ ಅಭ್ಯರ್ಥಿ ತೇಜಸ್ವಿನಿ ಅನಂತ್ಕುಮಾರ್ ಅದರ ಮುಖ್ಯಸ್ಥೆಯಾಗಿದ್ದಾರೆ. ಈ ಕುರಿತು ಯಾವ ಕ್ರಮ ಕೈಗೊಳ್ಳಲಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್ ಚುನಾವಣಾ ಆಯುಕ್ತರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಐಡಿ ಕಾರ್ಡ್ ಕಡ್ಡಾಯ
ಚುನಾವಣಾ ನಿಮಿತ್ತ ನಿರ್ಮಿಸಲಾಗಿರುವ ಎಲ್ಲ ಚೆಕ್ ಪೋಸ್ಟ್ಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ಕಡ್ಡಾಯವಾಗಿ ತಮಗೆ ನೀಡಿರುವ ಐಡಿ ಕಾರ್ಡ್ಗಳನ್ನು ಪ್ರದರ್ಶಿಸಬೇಕು. ಯಾರೊಂದಿಗೂ ಅಸಭ್ಯವಾಗಿ ವರ್ತಿಸಬಾರದು. ಒಂದು ವೇಳೆ ಅಸಭ್ಯ ವರ್ತನೆ ತೋರಿದ್ದು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
-ಮಂಜುನಾಥ್ ಪ್ರಸಾದ್, ಜಿಲ್ಲಾ ಚುನಾವಣಾಧಿಕಾರಿ