ನಮ್ಮ ಕೆಲಸ ನಾವು ಮಾಡುತ್ತೇವೆ, ಕಾಂಗ್ರೆಸ್ನವರು ಅವರ ಕೆಲಸ ಮಾಡಲಿ: ಮುಖ್ಯಮಂತ್ರಿ ಕುಮಾರಸ್ವಾಮಿ
"ಯಾರ ಬಳಿಯೂ ಭಿಕ್ಷೆ ಬೇಡಲ್ಲ"
ಬೆಂಗಳೂರು, ಮಾ.23: ನಾನು ಯಾರ ಬಳಿಯೂ ಭಿಕ್ಷೆ ಬೇಡಲ್ಲ. ನನ್ನ ಸ್ವಾಭಿಮಾನಕ್ಕೆ ಧಕ್ಕೆ ಮಾಡಲು ಅವಕಾಶ ನೀಡಲ್ಲ ಎಂದು ಮಂಡ್ಯ ಹಾಗೂ ತುಮಕೂರು ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಬೆಂಬಲಿಸಲು ಹಿಂದೇಟು ಹಾಕುತ್ತಿರುವ ಕಾಂಗ್ರೆಸ್ ನಾಯಕರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.
ಶನಿವಾರ ನಗರದ ಖಾಸಗಿ ಹೊಟೇಲ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೂ ಶಕ್ತಿ ಇದೆ. ಮಂಡ್ಯದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರಿದ್ದಾರೆ. ನಮ್ಮ ಕೆಲಸ ನಾವು ಮಾಡುತ್ತೇವೆ. ಕಾಂಗ್ರೆಸ್ನವರು ಅವರ ಕೆಲಸ ಮಾಡಲಿ ಎಂದರು.
ತುಮಕೂರು ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಮುದ್ದಹನುಮೇಗೌಡ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ವಿಚಾರ ನನಗೆ ಸಂಬಂಧಿಸಿದ್ದಲ್ಲ. ಅದು ಕಾಂಗ್ರೆಸ್ಗೆ ಸೇರಿದ ವಿಚಾರ ಎಂದು ಕುಮಾರಸ್ವಾಮಿ ತಿಳಿಸಿದರು.
ಕಾಂಗ್ರೆಸ್ ಪಕ್ಷದವರು ನಮಗೆ ತುಮಕೂರು ಸೇರಿದಂತೆ ಎಂಟು ಲೋಕಸಭಾ ಕ್ಷೇತ್ರಗಳನ್ನು ನೀಡಿದ್ದಾರೆ. ಎಲ್ಲ ಕ್ಷೇತ್ರಗಳಲ್ಲೂ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಅವರು ಹೇಳಿದರು.