ಉತ್ತಮ ಅಭ್ಯರ್ಥಿ ಆಯ್ಕೆ ಮಾಡಿ: ಮುಖ್ಯಚುನಾವಣಾಧಿಕಾರಿ ಸಂಜೀವ್ ಕುಮಾರ್
ಬೆಂಗಳೂರು, ಎ.3: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಕಣದಲ್ಲಿರುವ ಅಭ್ಯರ್ಥಿಗಳ ಸಂಪೂರ್ಣ ಮಾಹಿತಿ ಆಯೋಗದ ವೆಬ್ಸೈಟ್ನಲ್ಲಿ ಪ್ರಕಟ ಮಾಡಿದ್ದು, ಉತ್ತಮ ಅಭ್ಯರ್ಥಿ ಆಯ್ಕೆ ಮಾಡುವಂತೆ ಎಂದು ರಾಜ್ಯ ಮುಖ್ಯಚುನಾವಣಾಧಿಕಾರಿ ಸಂಜೀವ್ ಕುಮಾರ್ ನುಡಿದರು.
ಬುಧವಾರ ನಗರದ ಬಸವನಗುಡಿಯ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಮತದಾನದ ಜಾಗೃತಿ’ ಮೂಡಿಸಲು ಆರಂಭಿಸಲಾದ ‘ಚುನಾವಣಾ ಸಾಕ್ಷರತಾ ಕ್ಲಬ್’ಗೆ ಚಾಲನೆ ನೀಡಿ ಅವರು ಮಾತನಾಡಿದರು.
ಚುನಾವಣೆಗೆ ಸ್ಪರ್ಧಿಸುತ್ತಿರುವ ಎಲ್ಲ ಅಭ್ಯರ್ಥಿಗಳ ವಿವರವನ್ನು ಆಯೋಗದ ವೈಬ್ಸೈಟ್ನಲ್ಲಿ www.ceokarnataka.com ಪ್ರಕಟಿಸಲಾಗಿದೆ. ಪಕ್ಷಗಳ ಅಭ್ಯರ್ಥಿಗಳು ಅಥವಾ ಕಾರ್ಯಕರ್ತರು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರೆ ಅದನ್ನು ವಿಡಿಯೊ ಮತ್ತು ಫೋಟೋ ತೆಗೆದು ಸಿ-ವಿಜಿಲ್ ಆ್ಯಪ್ ಮೂಲಕ ದೂರು ಸಲ್ಲಿಸಿ ಎಂದು ಸಲಹೆ ಮಾಡಿದರು.
ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಮಾತನಾಡಿ, ಬೆಂಗಳೂರು ವ್ಯಾಪ್ತಿ ಪ್ರತಿ ಬಾರಿ ಮತದಾನದ ಪ್ರಮಾಣ ಇಳಿಮುಖವಾಗುತ್ತಿದ್ದು, ಇದು ಹೆಚ್ಚಾಗಲು ಮತದಾನದ ಮಹತ್ವದ ಬಗ್ಗೆ ಯುವಕರು ಪ್ರಚಾರ ಮಾಡಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಬಿ.ವಿ.ರವಿಶಂಕರ್ ಸೇರಿದಂತೆ ಪ್ರಮುಖರಿದ್ದರು.