ಮಾತನಾಡುವಾಗ ನಾಲಿಗೆ ಮೇಲೆ ಹಿಡಿತವಿರಲಿ: ಈಶ್ವರಪ್ಪಗೆ ನ್ಯಾಯಾಧೀಶರ ಎಚ್ಚರಿಕೆ
ಕೆ.ಎಸ್.ಈಶ್ವರಪ್ಪ
ಬೆಂಗಳೂರು, ಎ.5: ಮಾಜಿ ಉಪ ಮುಖ್ಯಮಂತ್ರಿ, ಹಾಲಿ ಶಾಸಕ ಕೆ.ಎಸ್.ಈಶ್ವರಪ್ಪ ಅವರಿಗೆ ಸಾರ್ವಜನಿಕ ಸ್ಥಳಗಳಲ್ಲಿ ನಾಲಿಗೆಯನ್ನು ಹಿಡಿತದಲ್ಲಿಟ್ಟುಕೊಂಡು, ಮಾತನಾಡಿ ಎಂದು ಜನಪ್ರತಿನಿಧಿಗಳ ನ್ಯಾಯಾಲಯ ಮೌಖಿಕವಾಗಿ ಎಚ್ಚರಿಕೆ ನೀಡಿದೆ.
ಪ್ರಕರಣ ರದ್ದುಕೋರಿ ಕೆ.ಎಸ್.ಈಶ್ವರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ಅವರಿದ್ದ ಪೀಠದಲ್ಲಿ ನಡೆಯಿತು. ನ್ಯಾಯಪೀಠವು ಅರ್ಜಿದಾರರಾದ ಕೆ.ಎಸ್.ಈಶ್ವರಪ್ಪ ಅವರಿಗೆ ಇಲ್ಲಿ ಎಲ್ಲರಿಗೂ ಮಾತನಾಡುವ ಹಕ್ಕನ್ನು ನೀಡಲಾಗಿದೆ. ಹಾಗೆಂದ ಮಾತ್ರಕ್ಕೆ ನಿಮ್ಮ ಬಾಯಿಗೆ ಬಂದಂತೆ ಮಾತನಾಡುವುದು ಒಳ್ಳೆಯ ಲಕ್ಷಣವಲ್ಲ. ಇಂತಹ ನಡವಳಿಕೆಯಿಂದ ಹೊರ ಬನ್ನಿ ಎಂದು ಮೌಖಿಕವಾಗಿ ಖಡಕ್ ಎಚ್ಚರಿಕೆ ನೀಡಿದೆ.
ಆರೋಪದಿಂದ ಖುಲಾಸೆ: 2013ರ ಎ. 9ರಂದು ವಿಧಾನ ಸಭೆ ಚುನಾವಣೆ ವೇಳೆ ಅಂದಿನ ಉಪ ಮುಖ್ಯಮಂತ್ರಿಯಾಗಿದ್ದ ಕೆ.ಎಸ್.ಈಶ್ವರಪ್ಪಅವರು ಶಿವಮೊಗ್ಗದಲ್ಲಿ ವಿಪ್ರ ವೇದಿಕೆ ಆಯೋಜಿಸಿದ್ದ ಸಾರ್ವಜನಿಕ ಸಮಾರಂಭದಲ್ಲಿ ಚುನಾವಣಾ ಭಾಷಣ ಮಾಡಿದ್ದರು. ಈ ಭಾಷಣ ಎರಡು ಕೋಮುಗಳ ನಡುವೆ ಸಾಮರಸ್ಯ ಹಾಳು ಮಾಡುವಂತಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಿದೆ ಎಂದು ಆರೋಪಿಸಿ ಕೋಟೆ ಠಾಣೆ ಪೊಲೀಸರು ಈಶ್ವರಪ್ಪ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.
ಐಪಿಸಿ ಸೆಕ್ಷನ್ 153 ಎ, 295ಎ ಮತ್ತು 298 ಅಡಿಯಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಈ ಪ್ರಕರಣದಲ್ಲಿ ಸೂಕ್ತ ಸಾಕ್ಷ್ಯಾಧಾರ ಒದಗಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂಬ ಅಭಿಪ್ರಾಯದೊಂದಿಗೆ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ಅವರು ಈಶ್ವರಪ್ಪ ಅವರನ್ನು ಆರೋಪದಿಂದ ಖುಲಾಸೆಗೊಳಿಸಿದ್ದಾರೆ. ಈ ಕುರಿತ ಆದೇಶವನ್ನು ಪ್ರಕಟಿಸಿದ ಅವರು, ಸಾರ್ವಜನಿಕ ವೇದಿಕೆಗಳಲ್ಲಿ ಸರಿಯಾಗಿ ಮಾತನಾಡಿ ಎಂದು ಈಶ್ವರಪ್ಪ ಅವರಿಗೆ ಮೌಖಿಕವಾಗಿ ಎಚ್ಚರಿಕೆ ನೀಡಿದರು.