ಐಟಿ ದಾಳಿ ಪ್ರಕರಣ: ಚಿನ್ನಾಭರಣ ಜಪ್ತಿ
ಬೆಂಗಳೂರು, ಎ.5: ಇತ್ತೀಚೆಗೆ ವಿವಿಧ ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ದಾಳಿ ನಡೆಸಿದ್ದ ಪ್ರಕರಣ ಸಂಬಂಧ ಗುತ್ತಿಗೆದಾರರು, ಇಂಜಿನಿಯರ್ಗಳಿಗೆ ಸೇರಿದ ಚಿನ್ನಾಭರಣ ಮತ್ತು ನಗದು ದಾಖಲೆ ಇಲ್ಲದ ಕಾರಣ ಅವುಗಳನ್ನು ಜಪ್ತಿ ಮಾಡಲಾಗಿದೆ.
2.1 ಕೋಟಿ ನಗದು ಹಾಗೂ 1.59 ಕೋಟಿ ಮೌಲ್ಯದ ಚಿನ್ನಾಭರಣವನ್ನು ಗುತ್ತಿಗೆದಾರರು ಮತ್ತು ಇಂಜಿನಿಯರ್ಗಳ ದಾಳಿ ಸಂದರ್ಭದಲ್ಲಿ ವಶಕ್ಕೆ ಪಡೆಯಲಾಗಿತ್ತು. ಇದಕ್ಕೆ ಸೂಕ್ತ ದಾಖಲೆಗಳನ್ನು ನೀಡುವಂತೆ ತನಿಖಾಧಿಕಾರಿಗಳು ನೋಟಿಸ್ ನೀಡಿದ್ದರು. ಆದರೆ, ವಿಚಾರಣೆಗೆ ಹಾಜರಾದ ಸಂದರ್ಭದಲ್ಲಿ ಸೂಕ್ತ ದಾಖಲೆ ನೀಡುವಲ್ಲಿ ವಿಫಲರಾದ ಹಿನ್ನೆಲೆ ಐಟಿ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.
ಅದೇ ರೀತಿ, ಪೂರ್ಣಗೊಳ್ಳದ ಕಾಮಗಾರಿಗೆ ಸರಕಾರ ಹಣ ಬಿಡುಗಡೆ ಮಾಡಿದೆ ಎನ್ನಲಾಗಿದ್ದು, ಈ ಸಂಬಂಧ ಗೊತ್ತಿಗೆದಾರನೋರ್ವನನ್ನು ವಿಚಾರಣೆ ನಡೆಸಿ ದಾಖಲೆಗಳನ್ನು ನೀಡುವಂತೆ ಸೂಚಿಸಿದ್ದರು. ಆದರೆ, ಸಮರ್ಪಕ ಉತ್ತರ ನೀಡಿಲ್ಲ ಎಂದು ತಿಳಿದುಬಂದಿದೆ. ಮಾ.28 ರಂದು ಮೈಸೂರು, ಮಂಡ್ಯ, ಹಾಸನ, ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು.